Showing posts with label ಸಮಾಜ/ಪತ್ರಿಕೆ. Show all posts
Showing posts with label ಸಮಾಜ/ಪತ್ರಿಕೆ. Show all posts

Friday, January 17, 2020

ವಿಶ್ವವಾಣಿ ಪತ್ರಿಕೆಯ ಸಂಪಾದಕರಿಗೆ,

ವಿಶ್ವವಾಣಿ ಪತ್ರಿಕೆಯ ಸಂಪಾದಕರೆ,
ನಾನು ಮೆಚ್ಚುವ ದಿನಪತ್ರಿಕೆಗಳಲ್ಲಿವಿಶ್ವವಾಣಿಯೂ ಒಂದು. ಇದಕ್ಕೆ ಕಾರಣ ವಿಶ್ವವಾಣಿಯಲ್ಲಿ ಕಂಡು ಬರುವ ಜಾಣಹಾಸ್ಯ. ಇದು ಅನೇಕ ಸಲ ಯಾರ್ಯಾರೋ ವ್ಯಕ್ತಿಗಳ ಹುಳಕನ್ನು ಪ್ರದರ್ಶಿಸುವ ಸಲುವಾಗಿಯೂ ಬಳಕೆಯಾಗುತ್ತಿದೆ. ಅದರಲ್ಲೇನೂ ತಪ್ಪಿಲ್ಲ ಬಿಡಿ; ಆದರೆ ಇದು ವಿನಾಕಾರಣ ವ್ಯಕ್ತಿನಿಂದನೆಯಾಗಬಾರದಷ್ಟೆ? ಹಾಗಾದಾಗ ವಿಶ್ವವಾಣಿಗೆ ಪೀತಪತ್ರಿಕೆ ಎನ್ನುವ ಬಿರುದು ಬರಲಿಕ್ಕಿಲ್ಲವೆ? ೧೭--೨೦ರ ಪತ್ರಿಕೆಯನ್ನು ನೋಡಿದಾಗ ಇಂತಹ ಭಾವನೆಯೊಂದು ನನ್ನ ಮನದಲ್ಲಿ ಸುಳಿದು ಹೋಯಿತು.

ವಿಶ್ವವಾಣಿಯ ಮುಖಪುಟದಲ್ಲಿಯೇ ಸಲ ಒಂದುಸುದ್ದಿ+ಟೀಕೆಪ್ರಕಟವಾಗಿದೆ. ಅದು ಹೀಗಿದೆ:

ಸಮಾಚಾರಕ್ಕೆ ಕೊಡಲಾದ ಶೀರ್ಷಿಕೆಯೆ ನನ್ನಲ್ಲಿ ಅಸಹ್ಯವನ್ನು ಹುಟ್ಟಿಸಿತು. ‘ಅಲ್ಲಾಡಿಸ್ತೀರಿಪದದ ಅರ್ಥವೇನು? ……..ತಲೆಯನ್ನೆ?.... ಸುದ್ದಿಯ ತಿರುಳು ಇದಕ್ಕೆ ವಿರುದ್ಧವಾಗಿದೆ; ಹಾಗಾದರೆ ಇದು ಪೃಷ್ಠವನ್ನು ಸೂಚಿಸುತ್ತಿರಬಹುದೆಓದುಗನಾದ ನನಗಂತೂ ತಿಳಿಯದು. ಸಂಪಾದಕರೇ ಹೇಳಬೇಕು! ಇನ್ನೂ ಕೆಳಮಟ್ಟಕ್ಕೆ ಇಳಿದು ಕೇಳಬಹುದಾದರೆ ಇದು ನಾಯಿಯ ಬಾಲವನ್ನು ಸೂಚಿಸುತ್ತಿದೆಯೆ? ಆದರೆ ಇದು ಒಂದು ಗಂಭೀರ ಪತ್ರಿಕೆಯು ಮುಖಪುಟದಲ್ಲಿ ಕೊಡಬಹುದಾದ ಶೀರ್ಷಿಕೆಯಂತೆ ನನಗೆ ಅನಿಸುತ್ತಿಲ್ಲ. ಹಾಗಾದರೆ ಇದು ಬಹುಶಃ ಆಧುನಿಕ ಪತ್ರಿಕಾಕಾರರ ಅಪರಿಮಿತ ಭಾಷಾಸ್ವಾತಂತ್ರ್ಯವಿರಬಹುದೇನೊ?

ವರದಿಯನ್ನು ಬರೆದ ಶ್ರೀ ಜಯವೀರ ವಿಕ್ರಮ ಸಂಪತ್ ಗೌಡರು ಸುರೇಶಕುಮಾರರನ್ನುಸುರೇಶಕ್ರಮಎಂದು ಕರೆದಿದ್ದಾರೆ. ಏಕೆಂದರೆ ಮಂತ್ರಿಗಳು ಎಲ್ಲರ ಮೇಲೂ  ಕ್ರಮಜರುಗಿಸುತ್ತಾರಂತೆ! ಜಯವೀರ ವಿಕ್ರಮ ಸಂಪತ್ ಗೌಡರು ವರದಿ ಮಾಡಿದ ಘಟನೆಯಲ್ಲಿ , ಕುಣಿದು ಕುಪ್ಪಳಿಸಿದ ಶಿಕ್ಷಕಿಯರು ಯಾವುದೇ ಅಪರಾಧ ಮಾಡಿಲ್ಲವಂತೆ; ಅವರು ಅನುಸರಿಸಿದ ಹಾಡಿನಲ್ಲಿ ಯಾವುದೇ ಅಶ್ಲೀಲತೆ ಇಲ್ಲವಂತೆ; ಅಲ್ಲಲ್ಲಿ ಅಲ್ಪ ಸ್ವಲ್ಪ ಡಬಲ್ ಮೀನಿಂಗ್ ಇರಬಹುದಂತೆ! ಇಂತಹ ಕಾರ್ಯಕ್ರಮಗಳನ್ನು  ಸಾರ್ವಜನಿಕರು ತಮ್ಮ ಟೀವಿಯಲ್ಲಿ ನೋಡುವುದಿಲ್ಲವೆ? (ನೋಡಿಯೇ ನೋಡುತ್ತಾರೆ ಎಂದು ಗ್ರಹಿಸಿಕೊಳ್ಳಿರಿ!) ವಿದ್ಯಾರ್ಥಿಗಳು ಅಲ್ಲಿ ಕೆಟ್ಟಿಲ್ಲ ಅಂದರೆ ಇಲ್ಲಿಯೂ ಸಹ (ತಮ್ಮ ಶಿಕ್ಷಕಿಯರ ಕುಣಿತವನ್ನು ನೋಡಿಯೂ ಸಹ) ಕೆಡಲಾರರು ಎನ್ನುವುದು ಜಯವೀರ ವಿಕ್ರಮ ಸಂಪತ್ ಗೌಡರ ತರ್ಕ.

ವಿಶ್ವವಾಣಿಯ ಸಂಪಾದಕರೆ, ನೀವು ಇತ್ತೀಚೆಗೆ ರಸ್ತೆಯ ಮೇಲೆ ಓಡಾಡುತ್ತಿರುವ ಹದಿಹರೆಯದ ಹುಡುಗರ ಗುಂಪುಗಳನ್ನು ನೋಡಿರುವುರಾ? ಐದಾರು ಹುಡುಗರ ಗುಂಪಿನಲ್ಲಿ ಒಬ್ಬನ ಅಥವಾ ಇಬ್ಬರ ಕೈಗಳಲ್ಲಿ ಬೆಲೆ ಬಾಳುವ ಸ್ಮಾರ್ಟ ಫೋನ್ಹುಡುಗರೆಲ್ಲರೂ ಸ್ಮಾರ್ಟ ಫೋನ್ ನೋಡುತ್ತ ಹೊಲಸು ಹೊಲಸು ಮಾತುಗಳನ್ನು ಆಡುತ್ತ ನಡೆಯುತ್ತಿರುತ್ತಾರೆ. ಕೆಲವೊಮ್ಮೆ ಅವರು ಹೇಳುವ ಮಾತು ಹೀಗೂ ಇರುತ್ತದೆ: ‘, ನಾ ಆಕಿನ್ನ ಕರದೇನ್ಲೆ. ಆಕಿ ಇಂಥಲ್ಲಿ ಬರತೇನಂತ ಹೇಳ್ಯಾಲಲೆ.’ ನಮ್ಮ ಹುಡುಗರ ಸದ್ಯದ ನೈತಿಕ ಮಟ್ಟ ಇದು. ಗೌಡರೆ, ನೀವು ಇದನ್ನು ಸಮರ್ಥಿಸುತ್ತೀರಾ? ಇಂತಹ ಹುಡುಗರೆ ನಂತರದಲ್ಲಿ ಅಸಹಾಯಕ ಬಾಲಕಿ ಸಿಕ್ಕಾಗ ರೇಪ್ ಮಾಡುವವರು; ಸಂತ್ರಸ್ತೆ ತಮ್ಮ ಗುರುತು ಹೇಳಬಹುದೆನ್ನುವ ಹೆದರಿಕೆಯಲ್ಲಿ ಅವಳನ್ನು ಭೀಕರವಾಗಿ ಕೊಲೆ ಮಾಡುವವರು. ಇವರೇ ನಿರ್ಭಯಾಳ ಅತ್ಯಾಚಾರಿ ಹಾಗು ಕೊಲೆಗಾರರು. ಇವರಿಗೆ ಇಂತಹ ಶಿಕ್ಷಣವನ್ನು ಯಾರು ನೀಡುತ್ತಿದ್ದಾರೆ, ಗೌಡರೆ? ಅವರ ಪರಿಸರವೆ ಅಂದರೆ ಪಾಠಶಾಲೆಯೆ ಇದಕ್ಕೆ ಕಾರಣವಲ್ಲವೆ?

ನನ್ನ ನಿವಾಸದ ಸ್ವಲ್ಪ ಕೆಳಗೆ ಒಂದು ಹಣಮಪ್ಪನ ಸ್ವಲ್ಪ ದೊಡ್ಡ ಗುಡಿಯಿದೆ. ಅಲ್ಲಿ ರೈತರು ಹಾಗು ಕಾರ್ಮಿಕರು ಕೂತು, ಹರಟೆ ಹೊಡೆದು ಹೋಗುತ್ತಿರುತ್ತಾರೆ. ಕೆಲವು ದಿನಗಳ  ಹಿಂದೆ ಒಂದು ಸಾರ್ವಜನಿಕ ಪ್ರದರ್ಶನ ಅಲ್ಲಿ ನಡೆದಿತ್ತು. ಒಬ್ಬ ಪುಟ್ಟ ಹುಡುಗಿ ಹಾಗು ಒಬ್ಬ ಹದಿಹರೆಯದ ಹುಡುಗ , ಯಾವುದೋ ಸಿನಿಮಾ ಹಾಡಿಗೆ, ತಮ್ಮ ಮೈ ಕೈ ಕುಣಿಸುತ್ತ ಅಸಹ್ಯವಾಗಿ ಕುಣಿಯುತ್ತಿದ್ದಾರೆ. ಕೂಡಿದ ಸಾರ್ವಜನಿಕರಿಂದ ಸೀಟಿ ಹಾಗು ಚಪ್ಪಾಳೆಗಳ ಮೆಚ್ಚುಗೆ. ಇದಕ್ಕೆ ಕಾರಣವೆಂದರೆ ಯಾವ ಗುಡಿ ಗುಂಡಾರಗಳಲ್ಲಿ ಒಂದು ಕಾಲಕ್ಕೆ ಹಳ್ಳಿಗರುಸತ್ಯ ಹರಿಶ್ಚಂದ್ರನಂತಹ ಬಯಲಾಟಗಳನ್ನು ಆಡುತ್ತಿದ್ದರೊ, ಅಲ್ಲೀಗ ಅನೈತಿಕ ಕುಣಿತ ನಡೆಯುತ್ತಿದೆ. ಇಂತಹದನ್ನು ಹುಡುಗರು ಕಲಿಯುವುದು ಟೀವೀ ಹಾಗು ಸ್ಮಾರ್ಟಫೋನುಗಳಿಂದ. ಇದಕ್ಕೆ ಪ್ರೋತ್ಸಾಹ ಕೊಡುವವರು ನಮ್ಮ ಶಿಕ್ಷಕಿಯರು ಹಾಗು ಕೆಲವಾರು ಪತ್ರಕರ್ತರು.

ಭಲೇ ಜಯವೀರ ವಿಕ್ರಮ ಸಂಪತ್ ಗೌಡರೆ! ಸುರೇಶಕುಮಾರರು ನಮ್ಮೆಲ್ಲ ರಾಜಕಾರಣಿಗಳಲ್ಲಿಯೇ ಸಭ್ಯ ಹಾಗು ಸುಸಂಸ್ಕೃತ ಎಂದು ಹೆಸರಾದವರು. ನಾವು ಕಟ್ಟಬೇಕಾದ ಭಾರತವು ಸುಸಂಸ್ಕೃತವಾದ ಆಧುನಿಕ ಭಾರತ ಎಂದು ಅರಿತವರು. ಅವರ ಜೊತೆಗೆ ನೀವು ಕೈಕೂಡಿಸದಿದ್ದರೆ ಬೇಡ, ಅವರ  ಕಾಲೆಳೆಯದಿದ್ದರೆ ಸಾಕು!
-ಸುನಾಥ

Friday, May 30, 2014

ಪತ್ರಕರ್ತರ ಕರ್ತವ್ಯ, ಅಕರ್ತವ್ಯ.


ನವೋದಯ ಕಾಲದಲ್ಲಿ ಕನ್ನಡ ಸಾಹಿತಿಗಳು ಕನ್ನಡ ಭಾಷೆಯನ್ನು ಕಟ್ಟಿದಂತೆ, ಬೆಳಸಿದಂತೆ, ಪತ್ರಿಕಾಕರ್ತರೂ ಸಹ ಕನ್ನಡ ಭಾಷೆಯನ್ನು ಬೆಳಸುತ್ತಲೇ ಬಂದಿದ್ದಾರೆ. ಕನ್ನಡ ಪತ್ರಿಕೆಗಳು ಪ್ರಾರಂಭವಾಗಿ ಅರ್ಧ ಶತಕಕ್ಕಿಂತಲೂ ಹೆಚ್ಚು ವರ್ಷಗಳು ಕಳೆದಿವೆ. ಕನ್ನಡದ ಮೊದಲ ಸಮಾಚಾರಪತ್ರಿಕೆ ‘ತಾಯಿನಾಡು’ ೧೯೨೭ರಲ್ಲಿ ಪ್ರಾರಂಭವಾಯಿತು. ‘ಸಂಯುಕ್ತ ಕರ್ನಾಟಕ’ ಪತ್ರಿಕೆ ೧೯೩೩ರಲ್ಲಿ ಪ್ರಾರಂಭವಾಯಿತು. ‘ಪ್ರಜಾವಾಣಿ’ ಪತ್ರಿಕೆಯು ೧೯೪೮ರಲ್ಲಿ ಪ್ರಾರಂಭವಾಯಿತು.

ಈ ಎಲ್ಲ ಪತ್ರಿಕೆಗಳು ಹೆಮ್ಮೆಪಡುವಂತಹ ಪತ್ರಿಕಾಶೈಲಿಯನ್ನು ನಿರ್ಮಿಸಿದವು. ಅನೇಕ ಹೊಸ ಪತ್ರಿಕಾಪದಗಳನ್ನು ಸೃಷ್ಟಿಸಿದವು. ಉದಾಹರಣೆಗೆ lead articleಗೆ ‘ಅಗ್ರಲೇಖನ’ವೆಂದು ಹೆಸರಿಸಿದರು. Vested interestಅನ್ನು ‘ಪಟ್ಟಭದ್ರ ಹಿತಾಸಕ್ತಿ’ ಎಂದು ಕರೆದರು. ಆಂಗ್ಲ ಭಾಷೆಯಲ್ಲಿರುವ ಅನೇಕ ಪತ್ರಿಕಾಪದಗಳನ್ನು ನಮ್ಮ ಪತ್ರಕರ್ತರು ತುಂಬ ಸಮರ್ಥವಾಗಿ ಕನ್ನಡೀಕರಿಸಿದ್ದಾರೆ. ಇದೊಂದು ಗಂಭೀರವಾದ ಕಾರ್ಯ. ಒಟ್ಟಿನಲ್ಲಿ ಒಂದು ಸಮಾಚಾರಪತ್ರಿಕೆಯು ಮಾಡಬೇಕಾದ ಮೂರು ಅವಶ್ಯಕ ಮುಖ್ಯ ಕಾರ್ಯಗಳನ್ನು ಇವು ಸಮರ್ಪಕವಾಗಿ ನಿರ್ವಹಿಸಿದವು:
(೧) ನಿಷ್ಪಕ್ಷಪಾತವಾಗಿ ಸಮಾಚಾರವನ್ನು ನೀಡುವುದು,
(೨) ಚಿಂತನಪರ ಲೇಖನಗಳನ್ನು ನೀಡುವುದು,
(೩) ಪತ್ರಿಕಾಕನ್ನಡವನ್ನು ಬೆಳೆಸುವುದು.

ಪತ್ರಿಕಾಕರ್ತರಷ್ಟೇ ಅಲ್ಲ ನಮ್ಮ ಸರಕಾರಿ ನೌಕರರು ಸಹ ‘ಸರಕಾರಿ’ ಹಾಗು ತಾಂತ್ರಿಕ ಪದಗಳನ್ನು ತುಂಬ ಅರ್ಥಪೂರ್ಣವಾಗಿ ಭಾಷಾಂತರಿಸಿದ್ದಾರೆ. ಉದಾಹರಣೆಗೆ ‘ಪಬ್ಲಿಕ್ ವರ್ಕ್ಸ್ ಡಿಪಾರ್ಟಮೆಂಟ್’ ಎನ್ನುವುದು ‘ಲೋಕೋಪಯೋಗಿ ಇಲಾಖೆ’ ಆಯಿತು , ‘ಬೆನಿಫಿಶರಿ’ಯು  ‘ಫಲಾನುಭವಿ’ ಆದನು. ‘ಸ್ಪೀಡ್ ಬ್ರೆಕರ್’ ಎನ್ನುವುದು ‘ರಸ್ತೆದಿಬ್ಬ’ ಆಯಿತು. ಪತ್ರಕರ್ತರು, ಸರಕಾರಿ ನೌಕರರು ಹಾಗು ಜನಸಾಮಾನ್ಯರು ಇಂತಹ ಅನೇಕ ಪದಗಳನ್ನು ಅನುವಾದಿಸಿದ್ದಾರೆ ಅಥವಾ ಮರುಸೃಷ್ಟಿಸಿದ್ದಾರೆ. ಅಂತಹ ಕೆಲವು ಪದಗಳು ಹೀಗಿವೆ:
Protocol......................ಶಿಷ್ಟಾಚಾರ
Ordinanace.................ಸುಗ್ರೀವಾಜ್ಞೆ
Green revolution........ ಹಸಿರು ಕ್ರಾಂತಿ
Transgenic..................ಕುಲಾಂತರಿ
anasthesia...................ಅರಿವಳಿಕೆ
Inferiority complex.......ಕೀಳರಿಮೆ
Unconscious................ಸುಪ್ತಪ್ರಜ್ಞೆ
Dedicated to people....ಲೋಕಾರ್ಪಣೆ
Preface........................ಮುನ್ನುಡಿ

ಇಂತಹ ಅನುವಾದ ಕಾರ್ಯವೇನೊ ಹೊಸದಾಗಿ ಪ್ರಾರಂಭವಾದದ್ದು. ನೂರಾರು ವರ್ಷಗಳಿಂದ ಕನ್ನಡದಲ್ಲಿಯೇ ಸುಂದರವಾದ ಅನೇಕ ಪದಪುಂಜಗಳು ಸೃಷ್ಟಿಯಾಗಿವೆ. ಉದಾಹರಣೆಗೆ:
ಉದರವೈರಾಗ್ಯ
ಸ್ಮಶಾನಶಾಂತಿ
ಲೋಕಮಾನ್ಯ

ಭಾರತದಲ್ಲಿ ರಾಜಪ್ರಭುತ್ವವಿದ್ದಂತಹ ಕಾಲದಲ್ಲಿ, ರಾಜರ ಅನುಯಾಯಿಗಳಾದ ಕೆಲವು ಗಣ್ಯರಿಗೆ ‘ರಾಜಮಾನ್ಯ’ ಎನ್ನುವ ಬಿರುದು ದೊರೆಯುತ್ತಿತ್ತು. ಸ್ವಾತಂತ್ರ್ಯಕ್ಕಾಗಿ ಬ್ರಿಟಿಶರ ವಿರುದ್ಧ ಸಮರ ಸಾರಿದ ಬಾಲಗಂಗಾಧರ ತಿಲಕರಿಗೆ ಜನಸಾಮಾನ್ಯರೇ ‘ಲೋಕಮಾನ್ಯ’ ಎನ್ನುವ ಬಿರುದನ್ನು ಇತ್ತರು. ಇಂತಹ ಸುಂದರವಾದ ಪದಗಳ ಸೃಷ್ಟಿಕರ್ತರು ಸಾಮಾನ್ಯ ಅನಾಮಧೇಯರು. ಇವರನ್ನು ಹುಡುಕಿ ಗೌರವಿಸುವುದು ನಮ್ಮಿಂದ ಸಾಧ್ಯವಿಲ್ಲ. ಈ ಎಲ್ಲ ಹಿನ್ನೆಲೆಯಲ್ಲಿ ನಮ್ಮ ಇತ್ತೀಚಿನ ಕೆಲವು ಪತ್ರಿಕಾಸಂಪಾದಕರ ಗುಣಪರೀಕ್ಷೆಯನ್ನು ಮಾಡೋಣ!

ಶ್ರೀ ವಿಶ್ವೇಶ್ವರ ಭಟ್ಟರು ಮೊದಲು ‘ವಿಜಯಕರ್ನಾಟಕ’ ಪತ್ರಿಕೆಯ, ತನ್ನಂತರ ‘ಕನ್ನಡಪ್ರಭಾ’ ಪತ್ರಿಕೆಯ ಸಂಪಾದಕರಾದರು. ‘ಕುಂಬಾರನಿಗೆ ಒಂದು ವರ್ಷ, ಡೊಣ್ಣೆಗೆ ಒಂದು ನಿಮಿಷ’ ಎನ್ನುವಂತೆ. ನಮ್ಮ ಪತ್ರಿಕಾಪೂರ್ವಜರ ಮಹತ್ಸಾಧನೆಯನ್ನು ಭಟ್ಟರು ನುಚ್ಚುನೂರು ಮಾಡುತ್ತಿದ್ದಾರೆ. ಒಂದು ಸಮಾಚಾರಪತ್ರಿಕೆಯಲ್ಲಿ ರಂಜನೆಗೂ ಸ್ಥಾನವಿರಲೇ ಬೇಕು. ಆದರೆ ಅದೇ ಪ್ರಧಾನವಾಗಬಾರದು. ಹಾಗಾದಾಗ, ಪತ್ರಿಕಾಶೈಲಿಯು ಭರತನಾಟ್ಯವಾಗುವ ಬದಲು ‘ತಮಾಶಾ, ನೌಟಂಕಿ’ ಕುಣಿತವಾಗುತ್ತದೆ. ವಿಶ್ವೇಶ್ವರಭಟ್ಟರು ತಮ್ಮ ವಿಚಿತ್ರ ಪದಪ್ರಯೋಗಗಳ ಮೂಲಕಇದನ್ನು ಸಾಧಿಸುತ್ತಿದ್ದಾರೆ. ಉದಾಹರಣೆಗೆ ‘ಹತ್ಯಾಚಾರ’ ಎನ್ನುವ ಪದಪ್ರಯೋಗವನ್ನು ನೋಡಿರಿ. ಅತ್ಯಾಚಾರದ ಬಳಿಕ ಮಾಡಿದ ಹತ್ಯೆಯನ್ನು ಸೂಚಿಸಲು ಭಟ್ಟರು ‘ಹತ್ಯಾಚಾರ’ ಎಂದು ಬರೆಯುತ್ತಾರೆ. ಇದನ್ನೇ ‘ಅತ್ಯಾಚಾರ ಹಾಗು ಕೊಲೆ’ ಎಂದರೆ ಆಗದೆ? ತಾವು ಹೊಸ ಪದವೊಂದನ್ನು ಟಂಕಿಸಿರುವದಾಗಿ ಭಟ್ಟರು ತಮ್ಮನ್ನು ತಾವೇ ಹೊಗಳಿಕೊಳ್ಳಬಹುದು. ಆದರೆ ಇದನ್ನು ನಾನು ‘ಪಂಕ್ ಪ್ರಯೋಗ’ ಎಂದು ಕರೆಯುತ್ತೇನೆ. ತಲೆಯ ಕೂದಲನ್ನು ವಿಚಿತ್ರವಾಗಿ ಕತ್ತರಿಸಿಕೊಂಡು ತಿರುಗಾಡುವ, ‘ಪಂಕ್’ ಎಂದು ಕರೆಯಿಸಿಕೊಳ್ಳುವ ಯುವಕರನ್ನು ನೀವು ನೋಡಿರಬಹುದು. ಜನರ ಗಮನ ಸೆಳೆಯಲು ಈ ಹುಚ್ಚಾಟವನ್ನು ಅವರು ಮಾಡುತ್ತಾರೆ. ಇದೊಂದು ತರಹದ ಮನೋರೋಗ. ವಿಶ್ವೇಶ್ವರ ಭಟ್ಟರು ಕನ್ನಡ ಭಾಷೆಯನ್ನು ‘ಪಂಕ್’ ಮಾಡುತ್ತಿದ್ದಾರೆ. ಆದರೆ ಇದು ಪತ್ರಿಕೆಯಲ್ಲಿ ಬಳಸಲು ಯೋಗ್ಯವಾದ ಪ್ರಯೋಗವಲ್ಲ.

ಕನ್ನಡವನ್ನು ಕುಲಗೆಡಿಸಲು ಭಟ್ಟರು ಇನ್ನೂ ಒಂದು ಉಪಾಯವನ್ನು ಕಂಡು ಹಿಡಿದಿದ್ದಾರೆ. ಒಂದು ಪದಕ್ಕೆ ಜೋಡಿಸಬೇಕಾದ ವ್ಯಾಕರಣಸಮ್ಮತ ವಿಭಕ್ತಿಪ್ರತ್ಯಯದ ಅಂಗಛ್ಛೇದವನ್ನು ಮಾಡುವುದು. ಉದಾಹರಣೆಗೆ ‘ವಾರಾಣಸಿಯಲ್ಲಿ’ ಎಂದು ಬರೆಯಬೇಕಾದ ಪದವನ್ನು ಭಟ್ಟರು ‘ವಾರಾಣಸೀಲಿ’ ಎಂದು ಬರೆಯುತ್ತಾರೆ. ಈ ತರಹದ ಪ್ರಯೋಗದಿಂದ ಭಟ್ಟರು ಏನನ್ನು ಸಾಧಿಸುತ್ತಾರೆ?

ಪತ್ರಿಕಾಕನ್ನಡವನ್ನು ಆಡುಭಾಷೆಯ ಕನ್ನಡವನ್ನಾಗಿ ಮಾಡುವ ದೊಡ್ಡಸ್ತಿಕೆಯೆ ಇದು? ಹಾಗಿದ್ದರೆ, ‘ಮಹಾರಾಜರು ಸಿಂಹಾಸನದ ಮೇಲೆ ಕುಳಿತರು’ ಅನ್ನುವ ವಾಕ್ಯವನ್ನು ‘ಮಾರಾಜರು ಸಿಂಆಸನದ ಮ್ಯಾಲೆ ಕುಂತರು’ ಎಂದು ಇವರು ಬರೆಯಬಹುದೇನೊ? ಇನ್ನೂ ಒಂದು ನೆವ ಭಟ್ಟರ ಬತ್ತಳಿಕೆಯಲ್ಲಿ ಇರಬಹುದು: ಲಭ್ಯವಿರುವ ಸ್ಥಳದಲ್ಲಿ ಸಮಾಚಾರವನ್ನು ಹೊಂದಿಸುವ ಸಲುವಾಗಿ, ಈ ರೀತಿಯಲ್ಲಿ ಬರೆಯಲಾಗಿದೆ, ಎಂದು ಅವರು ಹೇಳಬಹುದು. ಇದು ಒಪ್ಪಲು ಅಸಾಧ್ಯವಾದ ಕುಂಟುನೆವ. ಅಕ್ಷರಗಳ ಅಳತೆಯನ್ನು ಕಡಿಮೆ ಮಾಡಿದರೆ, ಸ್ಥಳಾವಕಾಶಕ್ಕೇನು ಕೊರತೆಯಾದೀತು? ನಿಜ ಹೇಳಬೇಕೆಂದರೆ ಓದುಗರನ್ನು ಆಕರ್ಷಿಸಲು ಭಟ್ಟರು ಮಾಡುತ್ತಿರುವ ಡೊಂಬರಾಟವಿದು!

ಭಟ್ಟರು ಇಷ್ಟಕ್ಕೇ ಸುಮ್ಮನಾಗಿಲ್ಲ. ಆಂಗ್ಲ ಪದಗಳಿಗೆ ತಪ್ಪು ಕನ್ನಡ ಪದಗಳನ್ನು ಸೂಚಿಸುವ ತೆವಲು ಅವರಲ್ಲಿದೆ. ಭಟ್ಟರು ಈ ಮೊದಲೊಮ್ಮೆ audacity ಪದವನ್ನು ‘ತಿಕಕೊಬ್ಬು’ ಎಂದು ವರ್ಣಿಸಿದಾಗ, ಅದನ್ನು ಖಂಡಿಸಿ ನಾನು ಇಲ್ಲಿ ಬರೆದಿದ್ದೆ. ಅಂತಹದೇ ತಪ್ಪನ್ನು ಭಟ್ಟರು ಮತ್ತೊಮ್ಮೆ ಮಾಡಿದ್ದಾರೆ. ಅದು ಹೀಗಿದೆ:
Faceless ಪದದ ಅರ್ಥ ‘ಗುರುತಿರದ’ ಎಂದಾಗುತ್ತದೆ, ಉದಾಹರಣೆಗೆ , Faceless mob, Faceless kidnapper, Faceless Terrorist ಇತ್ಯಾದಿ. ಭಟ್ಟರು faceless ಎಂದರೆ ‘ಮುಖೇಡಿ’ ಎಂದು ಸೂಚಿಸಿದ್ದಾರೆ. ‘ಮುಖೇಡಿ’ ಅಥವಾ ‘ಮುಖಹೇಡಿ’ ಅಥವಾ ‘ಮಖೀನ’ ಎಂದರೆ ಮತ್ತೊಬ್ಬರ ಜೊತೆ ಮುಖ ಎತ್ತಿ ಮಾತನಾಡಲೂ ಸಹ ಹೆದರಿಕೊಳ್ಳುವ, ಸಂಕೋಚಪಡುವ ವ್ಯಕ್ತಿ. ಭಟ್ಟರ ಪ್ರಕಾರ Faceless Terrorist ಎಂದರೆ ‘ಹೆದರುಪುಕ್ಕ, ಸಂಕೋಚಶೀಲ ಭಯೋತ್ಪಾದಕ’!
ಭಟ್ಟರೆ, ನೀವು ಇಂಗ್ಲಿಶ್ ಪದಗಳನ್ನೇ ಬಳಸಿರಿ ಅಥವಾ ಕನ್ನಡ ಪದಗಳನ್ನೇ ಬಳಸಿರಿ, ‘ಕನ್ನಡಪ್ರಭಾ’ದ ಓದುಗರಿಗೆ ಅರ್ಥವಾಗುತ್ತದೆ. ದಯವಿಟ್ಟು ಇಂಗ್ಲಿಶ್ ಪದವನ್ನು ಬಳಸಿ ಅದಕ್ಕೆ ತಪ್ಪು ಕನ್ನಡ ಪದವನ್ನು ಸೂಚಿಸಬೇಡಿ. ಅದು ಅಮಾಯಕ ಓದುಗರಿಗೆ, ವಿಶೇಷತಃ ವಿದ್ಯಾರ್ಥಿಗಳಿಗೆ ದಾರಿ ತಪ್ಪಿಸಬಹುದು.



ತನ್ನ ಅಜ್ಞಾನವನ್ನು ಇತರಲ್ಲಿ ಯಾವುದೇ ಸಂಕೋಚವಿಲ್ಲದೇ ಹರಡುವವನಿಗೆ ಏನೆನ್ನಬೇಕು? ಒಂದು ಜನಪ್ರಿಯ ಪತ್ರಿಕೆಯ ಸಂಪಾದಕರಾದ ವಿಶ್ವೇಶ್ವರ ಭಟ್ಟರು ತಮ್ಮ ಬರಹದ ಮೂಲಕ ತಪ್ಪು ಮಾಹಿತಿ ಪ್ರಸಾರವಾಗದಂತೆ ಎಚ್ಚರದಿಂದ ಇರಬೇಕು. ಆದರೆ ಇಲ್ಲಿ ನೋಡಿ: ‘ಬಾಲವಿಲ್ಲದ ಮುಧೋಳ ನಾಯಿ’ ಎಂದು ಬರೆಯುವ ಮೂಲಕ ಭಟ್ಟರು ಮುಧೋಳ ನಾಯಿಗೆ ಬಾಲ ಇರುವುದಿಲ್ಲ ಎನ್ನುವ ತಪ್ಪು ತಿಳಿವಳಿಕೆಯನ್ನು ಜನರಲ್ಲಿ ಹರಡುತ್ತಿದ್ದಾರೆ. ಮುಧೋಳ ನಾಯಿಗೆ ಏನಾದರೂ ಈ ವಿಷಯ ತಿಳಿದರೆ ಅದು ಭಟ್ಟರನ್ನು ಸುಮ್ಮನೆ ಬಿಟ್ಟೀತೆ? ಯಾಕೆಂದರೆ ಅದಕ್ಕೆ ಸಾಕಷ್ಟು ಉದ್ದವಾದ ಬಾಲವಿದೆ. ಭಟ್ಟರು, ‘ಇದು ಹಾಗಲ್ಲ, ಬಾಲವಿರದಂತಹ ಮುಧೋಳ ನಾಯಿ’ಯ ಬಗೆಗೆ ನಾನು ಬರೆಯುತ್ತಿದ್ದೆ ಎನ್ನುವ ಸಮಜಾಯಿಸಿ ಕೊಡಲು ಪ್ರಯತ್ನಿಸಬಹುದು. ದಯವಿಟ್ಟು ಈ ಮಾತನ್ನು ಮುಧೋಳ ನಾಯಿಯ ಎದುರಿಗೆ ಹೇಳಲು ಪ್ರಯತ್ನಿಸಿರಿ! 


ನೀವು ಎಷ್ಟೇ ತಿಳಿಹೇಳಿದರೂ ಭಟ್ಟರು ಎರಡೇ ವಾಕ್ಯಗಳಲ್ಲಿ ನಿಮ್ಮನ್ನು ಚಿತ್ ಮಾಡಿ ಬಿಡುತ್ತಾರೆ: `ಪ್ರತಿಯೊಂದು ಪತ್ರಿಕೆಗೂ ಒಂದು stylesheet ಇರುತ್ತದೆ ; ಇದು ಕನ್ನಡಪ್ರಭಾ ಪತ್ರಿಕೆಯ stylesheet !’  
 ‘ನೀಟಾದ ಸೂಟಿನ ಬಟ್ಟೆ ಹಾಕಿಕೊಂಡರೆ ಚೆನ್ನಾಗಿ ಕಾಣುತ್ತೀಯಪ್ಪಾ’ ಎಂದು ನೀವು ಒಬ್ಬ ಎಬಡನಿಗೆ ಹೇಳಿದರೆ, ಆತನು ‘ಲಂಗೋಟಿಯೇ ನನ್ನ style !’ ಎಂದು ಹೇಳಿದನಂತೆ. ಇದೂ ಹಾಗೆಯೇ!

ಭಟ್ಟರೆ, ಕನ್ನಡಪ್ರಭಾ ಪತ್ರಿಕೆಯ ಪ್ರಸಾರವು ನಿಮ್ಮ ಆಡಳಿತದಲ್ಲಿ ಸಾಕಷ್ಟು ವರ್ಧಿಸಿದೆ. ನೀವು ಕನ್ನಡದ ಒಬ್ಬ ಹೊಣೆಗಾರ ಸಂಪಾದಕರಂತೆ ವರ್ತಿಸಬೇಕೆ ವಿನಃ ಹತ್ಯಾಚಾರಿ ‘ಪಂಕ್’ ಸಂಪಾದಕನಂತೆ ಅಲ್ಲ. ಏಕೆಂದರೆ, ಪತ್ರಿಕೆಯನ್ನು ಓದುವ ಅಮಾಯಕ ತರುಣರು ಹಾಗು ವಿದ್ಯಾರ್ಥಿಗಳು ನೀವು ಬರೆದದ್ದೇ ಸರಿ ಎಂದು ತಪ್ಪಾಗಿ ಭಾವಿಸುತ್ತಾರೆ. ಅಷ್ಟೇ ಅಲ್ಲ, ಶ್ರೇಷ್ಠ ಇತಿಹಾಸವಿದ್ದಂತಹ ‘ಸಂಯುಕ್ತ ಕರ್ನಾಟಕ ಪತ್ರಿಕೆ’ಯೂ ಸಹ ನಿಮ್ಮನ್ನು ಅನುಕರಿಸಲು ಪ್ರಯತ್ನಿಸುತ್ತ ಮುಕ್ಕರಿಸುತ್ತಿದೆ. ಆದುದರಿಂದ ದಯವಿಟ್ಟು ಈ ‘ಮಂಗಾಟ’ವನ್ನು ನಿಲ್ಲಿಸಿರಿ ಎಂದು ನಿಮ್ಮಲ್ಲಿ ಪ್ರಾರ್ಥಿಸುತ್ತೇನೆ.     

Friday, December 6, 2013

ಇಲಸ್ಟ್ರೇಟೆಡ್ ವೀಕ್ಲಿ ಆ*ಫ್ ಇಂಡಿಯಾ……..ನೆನಪುಗಳು



ಭಾರತ ಆಂಗ್ಲಭಾಷಾ ಪತ್ರಿಕೆಗಳಲ್ಲಿ The Illustrated Weekly of Indiaಕ್ಕೆ ಮಹತ್ವದ ಸ್ಥಾನವಿದೆ. ೧೮೯೦ರಿಂದ Times of India ದಿನಪತ್ರಿಕೆಯ ಸಾಪ್ತಾಹಿಕ ಪುರವಣಿಯಾಗಿ ಪ್ರಕಟವಾಗುತ್ತಿದ್ದ ಈ ಪತ್ರಿಕೆ, The Illustrated Weekly of India ಎನ್ನುವ ಹೆಸರನ್ನು ಪಡೆದದ್ದು ೧೯೨೩ರಲ್ಲಿ. ೧೯೯೩ರಲ್ಲಿ ಈ ಪತ್ರಿಕೆ ಮುಚ್ಚಿತು. ಆ ಕಾಲದಲ್ಲಿ  ಇಂಗ್ಲಿಶ್ ಪತ್ರಿಕೆಗಳ ಸಂಖ್ಯೆಯೇ ವಿರಳವಾದದ್ದರಿಂದ ಈ ಪತ್ರಿಕೆ ಸುಮಾರಾಗಿ ಜನಪ್ರಿಯವಾಗಿತ್ತು ಹಾಗು ಇಂಗ್ಲಿಶ್ ಓದುಗರಿಗೆ ಅನಿವಾರ್ಯವಾದ ಪತ್ರಿಕೆಯಾಗಿತ್ತು. ಈ ಪತ್ರಿಕೆಯಲ್ಲಿ ಪ್ರಕಟವಾದ ಕೆಲ ಲೇಖನಗಳು ನನ್ನ ಮನಸ್ಸಿನಲ್ಲಿ ಇನ್ನೂ ಅಚ್ಚೊತ್ತಿವೆ. ಅವುಗಳನ್ನು ನಿಮ್ಮೊಡನೆ ಹಂಚಿಕೊಳ್ಳಲು ಬಯಸುತ್ತೇನೆ:

(೧) ಮುಂಬಯಿಯ ಕೊಳೆಗೇರಿಗಳ ನಿವಾಸಿಗಳನ್ನು ಸಂಘಟಿತ ಗುಂಡಾಗಳು ಶೋಷಿಸುವುದು ಹೊಸತೇನಲ್ಲ. ಪ್ರಧಾನಿ ಇಂದಿರಾ ಗಾಂಧಿಯವರು  ಫಕರುದ್ದೀನ ಅಲಿ ಅಹಮದ ಇವರನ್ನು ರಾಷ್ಟ್ರಪತಿಗಳನ್ನಾಗಿ ಮಾಡಿದಾಗಲೂ ಸಹ (೧೯೭೪- ೧೯೭೭) ಈ ಶೋಷಣೆ ನಡೆಯುತ್ತಲೇ ಇತ್ತು. ಅದಕ್ಕಾಗಿ ಯಾರನ್ನೂ ನಾನು ದೂರುತ್ತಿಲ್ಲ. ಆದರೆ ಈ ಅವಧಿಯಲ್ಲಿ ಸಾಮಾಜಿಕ ಒಳಿತಿಗೆ ಬದ್ಧಳಾದ ಓರ್ವ ಅಮಾಯಕ ಯುವತಿಯ ಬರ್ಬರ ಹತ್ಯೆಯ ಬಗೆಗೆ ಓದಿದ ಬಳಿಕ ನನ್ನ ಜೀವ ಹಿಂಡಿ ಹೋಯಿತು. ಈ ಪ್ರಕರಣದಲ್ಲಿ ನಾವು ಯಾರನ್ನು ದೂರಬೇಕು ಎನ್ನುವುದೇ ತಿಳಿಯುವದಿಲ್ಲ.  The Illustrated Weekly of Indiaದಲ್ಲಿ ಪ್ರಕಟವಾದ ಆ ಪ್ರಕರಣ ಹೀಗಿದೆ:

ಸಮಾಜಶಾಸ್ತ್ರ ವಿಷಯದಲ್ಲಿ ಮುಂಬಯಿ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಅಧ್ಯಯನ ಮಾಡುತ್ತಿದ್ದ ಓರ್ವ ಹುಡುಗಿಗೆ ತನ್ನ ಅಧ್ಯಯನದ ಕಾರಣಗಳಿಂದಾಗಿ ಸಂಘಟಿತ ಗುಂಡಾಗಳ ಬಗೆಗೆ ಒಂದಿಷ್ಟು ಮಾಹಿತಿ ದೊರೆಯುತ್ತದೆ.  ದೊರೆತ ಮಾಹಿತಿಯನ್ನು ತನ್ನ ಹೊಟ್ಟೆಯಲ್ಲಿಟ್ಟುಕೊಂಡು ಸುಮ್ಮನೆ ಕೂತಿದ್ದರೆ ಈ ಹುಡುಗಿ ಜಾಣಳಾಗುತ್ತಿದ್ದಳು. ಆದರೆ ಈ ದಡ್ಡ ಹುಡುಗಿ ಭಾರತದ ರಾಷ್ಟ್ರಪತಿಗಳಿಗೆ ಒಂದು ‘ರಹಸ್ಯ ಪತ್ರ’ವನ್ನು ಬರೆಯುತ್ತಾಳೆ. ಮುಂದೆ ಏನಾಯಿತು, ಅಂತೀರಾ? ಆ ಗುಂಡಾಗಳನ್ನು ಬಂಧಿಸಲು ರಾಷ್ಟ್ರಪತಿಯವರು ಆದೇಶ ಕಳುಹಿಸಿದರೆ? ಆ ಗುಂಡಾ ಧಂಧೆ ಬಂದಾಗಿ ಹೋಯಿತೆ? No… ಈ ‘ರಹಸ್ಯ ಪತ್ರ’ ಬರೆದ ಕೆಲವೇ ದಿನಗಳಲ್ಲಿ ಆ ಹುಡುಗಿಗೆ ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಲಾಯಿತು. ಇಲಸ್ಟ್ರೇಟೆಡ್ ವೀಕ್ಲಿಯಲ್ಲಿ ಈ ಹುಡುಗಿಯ ಮೊದಲಿನ ಫೋಟೋ ಹಾಗು ಚಿತ್ರಹಿಂಸೆಯ ನಂತರದ ಫೋಟೋವನ್ನು ಅಕ್ಕಪಕ್ಕದಲ್ಲಿ ಪ್ರಕಟಿಸಲಾಗಿತ್ತು. ಕರಳು ಹಿಂಡುವ ದೃಶ್ಯ.

ವಿಷಯ ಅದಲ್ಲ. ‘ರಹಸ್ಯ ಪತ್ರ’ದಲ್ಲಿದ್ದ ಮಾಹಿತಿ ಗುಂಡಾಗಳಿಗೆ ತಕ್ಷಣದಲ್ಲಿ ತಿಳಿದದ್ದು ಹೇಗೆ? ರಾಷ್ಟ್ರಪತಿಯವರ ಅಧಿಕಾರಿಗಳು ಇದನ್ನು ಬಯಲು ಮಾಡಿದರೆ? ಹಾಗಿದ್ದರೆ, ರಾಷ್ಟ್ರಪತಿಗಳು ಆ ನೀಚರ ಮೇಲೆ ಕ್ರಮ ಕೈಗೊಂಡರೆ? ಇಲಸ್ಟ್ರೇಟೆಡ್ ವೀಕ್ಲಿಯಲ್ಲಿ ಇದರ ಬಗೆಗೆ ಏನೂ ಮಾಹಿತಿ ಇರಲಿಲ್ಲ. ಆ ಎರಡು ಫೋಟೋಗಳನ್ನು ನೆನಸಿಕೊಂಡಾಗ, ಈಗಲೂ ನನಗೆ ಕಣ್ಣೀರು ಬರುವುದು ನಿಂತಿಲ್ಲ.

(೨) ಭಾರತವು ಧರ್ಮನಿರಪೇಕ್ಷ ದೇಶ ಎನ್ನುವುದರಲ್ಲಿ ಎರಡು ಮಾತಿಲ್ಲ. ಯಾಕೆಂದರೆ
            (ಅ) ಭಾರತೀಯ ಶಾಸನಗಳು ಧರ್ಮನಿರಪೇಕ್ಷವಾಗಿವೆ.
            (ಆ) ಭಾರತೀಯ ನ್ಯಾಯದಾನವು ಧರ್ಮನಿರಪೇಕ್ಷವಾಗಿದೆ.
ಎಲ್ಲಾ ದೇಶಗಳಲ್ಲಿ ನಾವು ಇಂತಹ ಸ್ಥಿತಿಯನ್ನು ಕಾಣುವದಿಲ್ಲ. ಇಲಸ್ಟ್ರೇಟೆಡ್ ವೀಕ್ಲಿಯು ಪ್ರಕಟಿಸಿದ ಒಂದು ಲೇಖನವು ಕೊಲ್ಲಿ ದೇಶಗಳ ಶಾಸನ ಹಾಗು ನ್ಯಾಯದಾನ ವ್ಯವಸ್ಥೆಯ ಮೇಲೆ ಬೆಳಕು ಚೆಲ್ಲುತ್ತದೆ.

ಕೊಲ್ಲಿ ದೇಶದ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಭಾರತೀಯ ಕಾರ್ಮಿಕನ ಮೇಲೆ, ಅಕಸ್ಮಾತ್ತಾಗಿ ವಾಹನವೊಂದು ಚಲಿಸಿ, ಆ ಕಾರ್ಮಿಕ ಸಾವನ್ನಪ್ಪುತ್ತಾನೆ. ನ್ಯಾಯಾಲಯವು “ಈತ ಭಾರತೀಯನಾದುದರಿಂದ ಇಷ್ಟೇ ಪರಿಹಾರ ಸಾಕು” ಎನ್ನುವ ತೀರ್ಪನ್ನು ನೀಡುತ್ತದೆ. ಅಷ್ಟರಲ್ಲಿಯೇ ಈತನು ಹಿಂದು ಧರ್ಮದವನು ಎನ್ನುವುದು ಗೊತ್ತಾದಾಗ, ಪರಿಹಾರದಲ್ಲಿ ಮತ್ತೆ ಒಂದು ಮೂರಾಂಶವನ್ನು ಕಡಿತಗೊಳಿಸಲಾಗುತ್ತದೆ.

ಪುಣ್ಯಕ್ಕೆ ನಮ್ಮಲ್ಲಿ ಹಾಗಿಲ್ಲ. ಭಾರತೀಯ ನ್ಯಾಯವ್ಯವಸ್ಥೆಯು ದೇಶ ಹಾಗು ಧರ್ಮಗಳ ಆಧಾರದ ಮೇಲೆ ಭೇದವನ್ನು ಮಾಡುವುದಿಲ್ಲ. ಇನ್ನು ಮುಂದೆಯೂ ಸಹ ಅದು ಹಾಗೆ ಉಳಿದೀತೆ? ಈ ಸಂದೇಹಕ್ಕೆ ಕಾರಣವೇನೆಂದರೆ ಕೇಂದ್ರಸರಕಾರವು ಪ್ರಸ್ತಾವಿಸುತ್ತಿರುವ ‘ಜಾತೀಯ ಹಿಂಸಾಚಾರದ ಮಸೂದೆ.’ ಬಹುಶಃ ಇದು ಚುನಾವಣಾ-ಡೊಂಬರಾಟ ಇರಬಹುದು ಎಂದುಕೊಳ್ಳೋಣ. ಒಂದು ವೇಳೆ ಇದು ಶಾಸನವಾದರೆ, ನಮ್ಮ ಜಾತ್ಯತೀತತೆಯು ಅಲ್ಲಿಗೆ ಶಾಸನಬದ್ಧವಾಗಿ ಅಂತ್ಯಗೊಂಡಂತೆ!

(೩) ಯೇಶು ಕ್ರಿಸ್ತನ ಜನನದ ಬಗೆಗೆ ‘ವೀಕ್ಲಿ’ಯಲ್ಲಿ ಒಂದು ಲೇಖನ ಪ್ರಕಟವಾಗಿತ್ತು. ಕೆಲವು ಸಂಶೋಧಕರು ಯೇಶು ಯಹೂದಿ ವೇಶ್ಯೆಯೊಬ್ಬಳಿಗೆ ರೋಮನ್ ನಾವಿಕನಲ್ಲಿ ಹುಟ್ಟಿದ ಮಗ ಎಂದು ಬರೆದದ್ದನ್ನು ಅಲ್ಲಿ ಪ್ರಸ್ತಾವಿಸಲಾಗಿತ್ತು. ಆ ಲೇಖನದ ವಿರುದ್ಧ ಭಾರತದಲ್ಲೇ ಅಗಲಿ, ಯುರೋಪ ಅಥವಾ ಅಮೆರಿಕಾದಲ್ಲಿಯೇ ಆಗಲಿ, ಆ ಸಮಯದಲ್ಲಿ ಯಾವುದೇ ಪ್ರತಿಭಟನೆ ಆಗಲಿಲ್ಲ. ಈಗಲಾದರೋ ಎಂತೆಂಥಾ ಕಾರಣಗಳಿಗಾಗಿ ನಮ್ಮ ಜನ ಪ್ರತಿಭಟನೆ ಮಾಡುತ್ತಿದ್ದಾರೆ! ಬಂಜಗೆರೆಯವರು ಬಸವಣ್ಣನ ಬಗೆಗೆ ಬರೆದ ಸಂಶೋಧನಾ ಲೇಖನದ ವಿರುದ್ಧ, ಗಣಪತಿಯ ಅನಾರ್ಯತ್ವದ ವಿರುದ್ಧ, ಡ್ಯಾನ್ ಬ್ರೌನನ ‘ಡಾ ವಿಂಚಿ ಕೋಡ್’ ಕಾದಂಬರಿಯ ವಿರುದ್ಧ….!

ಹದಿನೆಂಟನೆಯ ಶತಮಾನದಲ್ಲಿ ಬದುಕಿದ್ದ ಫ್ರೆಂಚ ಸಾಹಿತಿ ವೋಲ್ಟೇರನ ವಿಚಾರವನ್ನು ಪ್ರಜ್ಞಾವಂತ ಭಾರತೀಯರೇ (ಜ್ಞಾನಪೀಠಿಗಳನ್ನು ಒಳಗೊಂಡು) ಮರೆಯುತ್ತಿರುವುದು ಸೋಜಿಗದ ಸಂಗತಿ: “ನೀನು ಹೇಳುವುದನ್ನು ನಾನು ಒಪ್ಪುವುದಿಲ್ಲ. ಆದರೆ ಹಾಗೆ ಹೇಳಲು ನಿನಗಿರುವ ಸ್ವಾತಂತ್ರ್ಯವನ್ನು ನನ್ನ ಜೀವ ಕೊಟ್ಟಾದರೂ ರಕ್ಷಿಸುತ್ತೇನೆ.”
ಈಗಿನ ನಮ್ಮ ಭಾರತೀಯ ‘ನಾಗರಿಕರು’ ವಿರೋಧಿಗಳ ಜೀವ ತೆಗೆಯುವುದನ್ನೇ ಇಷ್ಟಪಡುತ್ತಾರೆ! (ಗಿರೀಶ ಕಾರ್ನಾಡರು ಮುಂಬಯಿಯ ಅಂತರರಾಷ್ಟ್ರೀಯ ಸಾಹಿತ್ಯಮೇಳದಲ್ಲಿ ಸಲ್ಮಾನ ರಶ್ದಿಯ ವಿರುದ್ಧ ಕೆಂಡ ಕಾರಿದ್ದನ್ನು ನೆನಪಿಸಿಕೊಳ್ಳಿರಿ.)

ಈ ಸಂದರ್ಭದಲ್ಲಿ ನಮ್ಮ ಸಂವೇದನೆಗಳು ಸೀಮಿತವಾಗುತ್ತಿರುವುದನ್ನೂ ಸಹ ನಾವು ಲಕ್ಷಿಸಬೇಕು. ಯಾವುದೋ ಒಂದು ಧರ್ಮದ ಪ್ರಾರ್ಥನಾ ಮಂದಿರವನ್ನು ಕಿಡಿಗೇಡಿಗಳು ಹಾನಿಗೊಳಿಸಿದಾಗ, ಕೇವಲ ಆ ಸಮುದಾಯದವರಷ್ಟೇ ಪ್ರತಿಭಟನಾ ಮೆರವಣಿಗೆಯನ್ನು ಮಾಡುತ್ತಾರೆ. ಹೀಗೇಕೆ? ಇಂತಹ ದುರುಳ ಕೃತ್ಯವು ಇತರರಲ್ಲಿ ಅಸಮಾಧಾನವನ್ನು ಏಕೆ ಹುಟ್ಟಿಸಬಾರದು? ನಾಗರಿಕರೆನ್ನಿಸಿಕೊಳ್ಳುವವರೆಲ್ಲ ಒಟ್ಟಾಗಿ ಏಕೆ ಪ್ರತಿಭಟಿಸಬಾರದು?

(೪) ಇಲಸ್ಟ್ರೇಟೆಡ್ ವೀಕ್ಲಿಯು ಪ್ರಕಟಿಸಿದ ಒಂದು ನಗೆಹನಿಯು ಅನೇಕ ವರ್ಷಗಳ ಬಳಿಕ ವಿಪರ್ಯಾಸವಾಗಿ ರೂಪಾಂತರಗೊಂಡಿದ್ದು ಆಶ್ಚರ್ಯದ ಸಂಗತಿಯಾಗಿದೆ. ಆ ನಗೆಹನಿ ಹೀಗಿದೆ:
ರಶಿಯಾದಲ್ಲಿ ಮಹಾಕ್ರಾಂತಿ ಜರುಗಿದ ನಂತರ ಕಮ್ಯುನಿಸ್ಟ ಅಧಿಕಾರಿಯೊಬ್ಬನು ಓರ್ವ ಪ್ರಜೆಗೆ ಪ್ರಶ್ನೆ ಕೇಳುತ್ತಿದ್ದಾನೆ.
ಅಧಿಕಾರಿ: ರಶಿಯದ ಮಹಾಕ್ರಾಂತಿ ಜರುಗುವ ಮೊದಲು ನೀನು ಯಾವ ಊರಿನಲ್ಲಿದ್ದಿ?
ಪ್ರಜೆ: ಸೇಂಟ ಪೀಟರ್ಸಬರ್ಗನಲ್ಲಿದ್ದೆ, ಸ್ವಾಮಿ.
ಅಧಿಕಾರಿ: ಕ್ರಾಂತಿ ಜರಗುವ ಅವಧಿಯಲ್ಲಿ?
ಪ್ರಜೆ: ಪೆಟ್ರೋಗ್ರ್ಯಾಡ್‍ನಲ್ಲಿ, ಸ್ವಾಮಿ.
ಅಧಿಕಾರಿ: ಕ್ರಾಂತಿಯ ನಂತರ?
ಪ್ರಜೆ: ಲೆನಿನ್‍ಗ್ರ್ಯಾಡ್‍ನಲ್ಲಿ ಇದ್ದೇನೆ, ಸ್ವಾಮಿ.
ಅಧಿಕಾರಿ: ಈ ಮೂರು ಶಹರಗಳಲ್ಲಿ ನಿನಗೆ ಅತಿ ಮೆಚ್ಚಿಗೆಯಾಗುವ ಊರು ಯಾವುದು?
ಪ್ರಜೆ: ಸೇಂಟ ಪೀಟರ್ಸಬರ್ಗ, ಸ್ವಾಮಿ!
(ಟಿಪ್ಪಣಿ: ಸೇಂಟ ಪೀಟರ್ಸಬರ್ಗ ಎನ್ನುವ ಪಟ್ಟಣದ ಹೆಸರನ್ನು ೧೯೧೪ರಲ್ಲಿ ಪೆಟ್ರೋಗ್ರ್ಯಾಡ್‍ ಎಂದು ಬದಲಾಯಿಸಲಾಯಿತು. ೧೯೨೪ರಲ್ಲಿ ಲೆನಿನ್‍ಗ್ರ್ಯಾಡ್‍ ಎಂದು ಬದಲಾಯಿಸಲಾಯಿತು. !)

ವೀಕ್ಲಿ ಈ ನಗೆಹನಿಯನ್ನು ಪ್ರಕಟಿಸಿ ಸುಮಾರು ೨೦-೨೫ ವರ್ಷಗಳ ನಂತರ ರಶಿಯಾ ದೇಶ glasnost ಹಾಗು perestroikaದ ಪರಿಣಾಮದಿಂದ ಒಡೆದು ತುಂಡಾಯಿತು. ಲೆನಿನ್‍ಗ್ರ್ಯಾಡ್ ಎನ್ನುವ ಹೆಸರನ್ನು ೧೯೯೧ರಲ್ಲಿ ಮತ್ತೊಮ್ಮೆ ಸೇಂಟ ಪೀಟರ್ಸಬರ್ಗ ಎಂದು ಬದಲಾಯಿಸಲಾಯಿತು.
ಎಂತಹ ವಿಪರ್ಯಾಸ!