Monday, January 31, 2011

Mr. Prime Minister...


Mr. Prime Minister,
We, Indians have great regard for you. We believe that you are an honest and sincere person. You know that a person who conceals the knowledge of crime becomes an accessory to crime. Your refusal to disclose the names of the criminals who have looted and cheated India and kept the black money in foreign banks makes us lose our faith in you. Common man becomes inclined to think that you have a political interest in this.

Mr. Prime Minister,
This is the historic moment for you to come out with a clean conscience and answer to the questions that your countrymen are asking you. The choice is yours to either make your name shine as a great Indian or let it roll in dust. Of course there are always the advocates of the devil who come with ridiculous excuses like, ‘the AG does not know addition & subtraction or that we have a coalition dharma etc.’

Mr. Prime Minister,
In contrast to this fraudulent behaviour of those who advise you, let me give the example of a great son of India, Chhatrapati Shivaji. Shivaji had appointed his son Sambhaji as the governor of a province of his kingdom. Sambhaji raided the adjacent Mogul fort and captured the daughter-in-law of the Muslim officer there. He brought her to his palace. As soon as Shivaji learnt of this adventure, he had his son Sambhaji arrested and prosecuted. There are always advocates for the devil, Mr. Prime Minister. The advocate for Sambhaji argued that the crime was committed outside the jurisdiction of Shivaji where Shivaji had no authority. Shivaji said the crime was committed by an officer of the king and therefore he had all the authority to try Sambhaji. Sambhaji was punished with imprisonment and the lady was returned to her place with honour.

Mr. Prime Minister,
What is your choice? Are you going to listen to the advocates of the devil and protect the criminals? Or are you going to trade the path of the great Indians like Shivaji and the Mahatma? This is the golden moment for you to stand up in truth and make your name shine. You are answerable to the people of India. If you fail you have lost a historic moment.

Monday, January 24, 2011

ಶುಭ ನುಡಿಯೆ ಶಕುನದ ಹಕ್ಕಿ.........ದ.ರಾ.ಬೇಂದ್ರೆ


`ಶುಭ ನುಡಿಯೆ ಶಕುನದ ಹಕ್ಕಿ ಕವನವು ಬೇಂದ್ರೆಯವರ ನಾದಲೀಲೆ ಕವನಸಂಕಲನದಲ್ಲಿ ಅಡಕವಾಗಿದೆ. ಕಳವಳದಲ್ಲಿ ಮುಳುಗಿದ ಮನಸ್ಸಿನ ಸ್ಥಿತಿಯನ್ನು ಬೇಂದ್ರೆಯವರು ಈ ಕವನದಲ್ಲಿ   ವರ್ಣಿಸಿದ್ದಾರೆ. ಪ್ರತಿಯೊಬ್ಬ ಮನುಷ್ಯನ ಬಾಳಿನಲ್ಲಿಯೂ ಕಷ್ಟದ ಅನೇಕ ಪ್ರಸಂಗಗಳು ಬರುತ್ತವೆ. ಪುರುಷಪ್ರಯತ್ನವೆಲ್ಲವೂ ಸೋತಾಗ, ಮನುಷ್ಯನು ದೈವದ ಮೊರೆ ಹೋಗುತ್ತಾನೆ. ತಾನು ನಂಬಿದ ದೈವ ತನ್ನ ಕೈಹಿಡಿಯುವುದೊ, ಕೈ ಬಿಡುವುದೊ ಎಂದು ಅರಿಯದೆ, ಮನುಷ್ಯನು ತಳಮಳಿಸುತ್ತಾನೆ. ತನ್ನ ದೈವವನ್ನು ಊಹಿಸಲು ಆತನು ದೈವೀ ಸಂಕೇತಗಳಿಗೆ ಅಂದರೆ ಶಕುನಗಳಿಗೆ ಶರಣಾಗುತ್ತಾನೆ. ಆತನ ತಾರ್ಕಿಕ ಬುದ್ಧಿಯು ಸೋತು ಹೋಗಿ, ನಿಗೂಢತೆಗೆ ಅವನ ಮನಸ್ಸು ಒಲಿಯುತ್ತದೆ. ಇದು ಈ ಕವನದಲ್ಲಿಯ ಭಾವ.
ಕವನದ ಪೂರ್ಣಪಾಠ ಹೀಗಿದೆ:
.....................................................................................................
                   ಶುಭ ನುಡಿಯೆ ಶಕುನದ ಹಕ್ಕಿ

                        (ರಾಗ : ಸಾವೇರಿ--ಏಕತಾಳ)

ಶುಭ ನುಡಿಯೆ
                        ಶುಭ ನುಡಿಯೆ ಶಕುನದ ಹಕ್ಕಿ |
                                         ಶುಭ ನುಡಿಯೆ    || ಪಲ್ಲ ||

                        ಮುಂಗಾಳು ಕವಿಯುವಾಗ
                        ಹಸುಗೂಸಿಗೆ ಕಸಿವಿಸಿಯಾಗಿ
                        ಕಕ್ಕಾವಿಕ್ಕಿಬಡುತ ಪಾಪ
                        ಕಿರಿ ಕಿರಿ ಅಳುತಲಿತ್ತ
                                     ಶುಭ ನುಡಿಯೆ
                        ಶುಭ ನುಡಿಯೆ ಶಕುನದ ಹಕ್ಕಿ | ಶುಭ ನುಡಿಯೆ |

                        ಇರುಳು ಗಾಳಿ ಬೀಸುವಾಗ
                        ಹಣತಿಸೊಡರು ಹೆದರಿದಂತೆ
                        ತಾನು ತಣ್ಣಗಾದೇನೆಂದು  
                        ಚಿಳಿ ಚಿಳಿ ನಡುಗುತಲಿತ್ತ
                                     ಶುಭ ನುಡಿಯೆ
                        ಶುಭ ನುಡಿಯೆ ಶಕುನದ ಹಕ್ಕಿ | ಶುಭ ನುಡಿಯೆ |

                        ನಿದ್ದೆ ಬಳಲಿ ಬಳಿಯಲಿ ಬಂದು
                        ಕೂಡಿದೆವೆಗಳಾಸರೆಯಲ್ಲಿ
                        ಮೆsಲ್ಲಗೆ, ಒರಗುವ ಅದನು
                        ಒಂಟಿ ಸೀನು ಹಾರಿಸುತಿತ್ತ
                                     ಶುಭ ನುಡಿಯೆ
                        ಶುಭ ನುಡಿಯೆ ಶಕುನದ ಹಕ್ಕಿ | ಶುಭ ನುಡಿಯೆ |

                        ಕತ್ತಲೆಯ ಕೆಸರಿನ ತಳಕೆ
                        ಮಿನಮಿನಗುವ ಹರಳುಗಳಂತೆ
                        ಚಿಕ್ಕೆ ಕೆಲವು ತೊಳಗುತಲಿರಲು
                        ಗಳಕನೊಂದು ಉಲಿಯುತಲಿತ್ತ
                                    ಶುಭ ನುಡಿಯೆ
                        ಶುಭ ನುಡಿಯೆ ಶಕುನದ ಹಕ್ಕಿ | ಶುಭ ನುಡಿಯೆ |

ಉಸಿರು ತೂಗು-ತೊಟ್ಟಿಲಲ್ಲಿ
                        ಜೀವ ಮೈಯ ಮರೆತಿರಲಾಗಿ
                        ಒಳಗಿನಾವ ಚಿಂತೆಯ ಎಸರೋ
                        ತಂತಾನೆ ಕನವರಿಸುತಿತ್ತ
                                    ಶುಭ ನುಡಿಯೆ
                        ಶುಭ ನುಡಿಯೆ ಶಕುನದ ಹಕ್ಕಿ | ಶುಭ ನುಡಿಯೆ |

ನಟ್ಟಿರುಳಿನ ನೆರಳಿನಲ್ಲಿ
                        ನೊಂದ ಜೀವ ಮಲಗಿರಲಾಗಿ
                        ಸವಿಗನಸು ಕಾಣುವಾಗ
                        ಗೂಗೆಯೊಂದು ಘೂಕ್ಕೆನುತಿತ್ತ
                                    ಶುಭ ನುಡಿಯೆ
                        ಶುಭ ನುಡಿಯೆ ಶಕುನದ ಹಕ್ಕಿ | ಶುಭ ನುಡಿಯೆ |

                        ಎಚ್ಚರಾದ ಪೆಚ್ಚು ಮನವು
                        ಹುಚ್ಚೆದ್ದು ಹರಿಯುತಿರಲು
                        ನಿದ್ದೆಯಿಲ್ಲ ಆಕಳಿಸಿದರೂ
                        ಹಲ್ಲಿಯೊಂದು ಲೊಟಗುಡತಿತ್ತ
                                    ಶುಭ ನುಡಿಯೆ
                        ಶುಭ ನುಡಿಯೆ ಶಕುನದ ಹಕ್ಕಿ | ಶುಭ ನುಡಿಯೆ |

                        ಬೆಳಗಿನ ತಂಗಾಳಿ ಬಂದು
                        ನಸುಕು ಮಸುಕು ಮೂಡುತಲಿರಲು
                        ಚಿಲೀ ಪಿಲೀ ಚಿಲಿಪಿಲಿ ಎಂದು
                        ಹಾಲಕ್ಕಿ ಉಲಿಯುತಲಿತ್ತ
                                    ಶುಭ ನುಡಿಯೆ
                        ಶುಭ ನುಡಿಯೆ ಶಕುನದ ಹಕ್ಕಿ | ಶುಭ ನುಡಿಯೆ |

                        ನಿನ್ನ ಸೊಲ್ಲ ನಂಬಿ ಎದ್ದೆ
                        ಮೈಯೆಲ್ಲ ನಡುಕವಿದ್ದು
                        ನೀನೆ ಶುಭ ನುಡಿಯುವಾಗ
                        ಏನಿದ್ದೇನು? ಎಲ್ಲಾ ಶುಭವೇ !
                                    ಶುಭ ನುಡಿಯೆ
                        ಶುಭ ನುಡಿಯೆ ಶಕುನದ ಹಕ್ಕಿ | ಶುಭ ನುಡಿಯೆ |
-----------------------------------------------------------------------------------------------
ಶುಭ ನುಡಿಯೆ
ಶುಭ ನುಡಿಯೆ ಶಕುನದ ಹಕ್ಕಿ |
                    ಶುಭ ನುಡಿಯೆ    || ಪಲ್ಲ ||

ಕವನದ ಮೊದಲಿಗೆ ಬೇಂದ್ರೆಯವರು `ಶುಭ ನುಡಿಯೆ ಎಂದು ಶಕುನದ ಹಕ್ಕಿಯನ್ನು ಪ್ರಾರ್ಥಿಸುತ್ತಾರೆ. ಹಾಗು ಈ ಪ್ರಾರ್ಥನೆಯನ್ನು ಕವನದ ಪಲ್ಲವನ್ನಾಗಿ ಮಾಡಿದ್ದಾರೆ. ಯಾವುದೇ ಒಂದು ಶಕುನವು ಉದಾಹರಣೆಗೆ ಹಲ್ಲಿ ಲೊಚಗುಟ್ಟುವದು ಕಿವಿಗೆ ಬಿದ್ದಾಗ, ದೇವರನ್ನು ಸ್ಮರಿಸಬೇಕು ಅಥವಾ `ಒಳಿತು ಎಂದು ಅನ್ನಬೇಕು. ಇದು ಹಿರಿಯರು ಹೇಳುವ ಮಾತು. ನಮ್ಮ ದೈವ ನಮಗೆ ಅಮಂಗಳವನ್ನು ತರದಿರಲಿ ಎನ್ನುವದು ಈ ಮಾತಿನ ಅರ್ಥ. ಈ ಪ್ರಾರ್ಥನೆಯೇ ಈ ಕವನದಲ್ಲಿ ಮತ್ತೆ ಮತ್ತೆ ಮರುಕಳಿಸುವ ಆಶಯವಾಗಿದೆ.

ಮೊದಲ ನುಡಿ:
ಮುಂಗಾಳು ಕವಿಯುವಾಗ
ಹಸುಗೂಸಿಗೆ ಕಸಿವಿಸಿಯಾಗಿ
ಕಕ್ಕಾವಿಕ್ಕಿಬಡುತ ಪಾಪ
ಕಿರಿ ಕಿರಿ ಅಳುತಲಿತ್ತ
                ಶುಭ ನುಡಿಯೆ
ಶುಭ ನುಡಿಯೆ ಶಕುನದ ಹಕ್ಕಿ | ಶುಭ ನುಡಿಯೆ |

ಕವನದ ಮೊದಲ ನುಡಿಯು ಕತ್ತಲೆ ಕವಿಯುತ್ತಿರುವ ಮುಸ್ಸಂಜೆಯ ಕಾಲವನ್ನು ಸೂಚಿಸುವ ಮೂಲಕ ಪ್ರಾರಂಭವಾಗುತ್ತದೆ. ಆದರೆ ಬೇಂದ್ರೆಯವರು ಈ ಕಾಲವನ್ನು ಮುಸ್ಸಂಜೆ ಎಂದು ಕರೆಯದೆ ಮುಂಗಾಳು ಎಂದು ಕರೆದಿದ್ದಾರೆ. ಕಾಳು ಎಂದರೆ ಕಪ್ಪು ಎಂದೂ ಅರ್ಥವಾಗುತ್ತದೆ, ಕಾಲ ಎಂದೂ ಅರ್ಥವಾಗುತ್ತದೆ. ಒಟ್ಟಿನಲ್ಲಿ ಇದು ಅಶುಭದ ಭಯವನ್ನು ಸೂಚಿಸುವ ಪ್ರಯೋಗವಾಗಿದೆ. ಈ ಭಯಕ್ಕೆ ಕಾರಣವೇನು? ಇದು ಅನಿಶ್ಚಿತತೆಯಿಂದ ಹಾಗು ಅಸಹಾಯಕತೆಯಿಂದ ಹುಟ್ಟಿದ ಭಯ. ಹಸುಗೂಸಿಗೆ ಕಸಿವಿಸಿಯಾದಾಗ ಅದರ ಕಾರಣವನ್ನು ಊಹಿಸುವದು ಯಾರಿಗೂ ಸಾಧ್ಯವಾಗದು. ಕೂಸು ಕಕ್ಕಾವಿಕ್ಕಿಯಾಗಿ, ಭೋರೆಂದು ಅಳುತ್ತದೆ; ಕಿರಿಕಿರಿ ಮಾಡುತ್ತದೆ. ಹಿರಿಯರು ದಿಕ್ಕುಗಾಣದವರಾಗುತ್ತಾರೆ. ಕೊನೆಗೆ ತಾಯಿಯು ಕೂಸಿನ ಮುಖಕ್ಕೆ ದೃಷ್ಟಿ ತೆಗೆಯುತ್ತಾಳೆ. ಎಲ್ಲ ಕೆಟ್ಟ ದೃಷ್ಟಿಗಳು ಹೋಗಲಿ ಎಂದು ದೈವಕ್ಕೆ ಬೇಡಿಕೊಳ್ಳುತ್ತಾಳೆ.

ಇಲ್ಲಿ ಕೂಸು ಅಸಹಾಯಕ ಜೀವಿಯ ಸಂಕೇತವಾದರೆ, ಮುಂಗಾಳು ಕಠಿಣ ಪರಿಸ್ಥಿತಿಯ ಅನಿಶ್ಚಿತ ಪರಿಣಾಮದ ಸಂಕೇತವಾಗಿದೆ. ಈ ಪರಿಸ್ಥಿತಿಯನ್ನು ನಿರ್ವಹಿಸುವದು ಪುರುಷಪ್ರಯತ್ನದ ಮೂಲಕ ಅಸಾಧ್ಯವಾದಾಗ, ವ್ಯಕ್ತಿಯು ದೈವದ ಮೊರೆ ಹೋಗುತ್ತಾನೆ. ದೈವವನ್ನು ಅರಿತುಕೊಳ್ಳಲೆಂದು ದೈವೀ ಸಂಕೇತಗಳಲ್ಲಿ ಅಂದರೆ ಶಕುನಗಳಲ್ಲಿ ನಂಬಿಕೆ ಇರಿಸುತ್ತಾನೆ. ನಿಸರ್ಗಜೀವಿಗಳಾದ ಗೂಗೆ, ಹಾಲಕ್ಕಿ ಹಾಗು ಹಲ್ಲಿಯಂತಹ ಜೀವಿಗಳು ಹೊರಡಿಸುವ ಧ್ವನಿಯನ್ನು ಶಕುನವೆಂದು ಭಾವಿಸಿ ಒಳ್ಳೆಯ ಶಕುನಗಳಿಗಾಗಿ ಪ್ರಾರ್ಥಿಸುತ್ತಾನೆ.
ಆ ಮೂಲಕ ದೈವೀ ಸಹಾಯ ಬರಬಹುದೆಂದು ನಂಬುತ್ತಾನೆ.

ಎರಡನೆಯ ನುಡಿಯಲ್ಲಿ ಬೇಂದ್ರೆಯವರು ಇರುಳು ಗಾಳಿಯ ಹಾಗು ಹಣತಿಯ ಸೊಡರಿನ ಪ್ರತಿಮೆಗಳನ್ನು ಬಳಸುತ್ತಾರೆ.
ಇರುಳು ಗಾಳಿ ಬೀಸುವಾಗ
ಹಣತಿಸೊಡರು ಹೆದರಿದಂತೆ
ತಾನು ತಣ್ಣಗಾದೇನೆಂದು
ಚಿಳಿ ಚಿಳಿ ನಡುಗುತಲಿತ್ತ
                      ಶುಭ ನುಡಿಯೆ
ಶುಭ ನುಡಿಯೆ ಶಕುನದ ಹಕ್ಕಿ | ಶುಭ ನುಡಿಯೆ |

ಇರುಳ ಗಾಳಿ ಎಂದರೆ ಹೆಚ್ಚುತ್ತಿರುವ ಸಂಕಟಗಳು. ಪುರುಷಪ್ರಯತ್ನ ವ್ಯರ್ಥವಾದ ಬಳಿಕ ಮನುಷ್ಯನು ದೈವದ ಮೊರೆ ಹೋಗುತ್ತಾನೆ. ಕಷ್ಟದ ತಮಂಧದಲ್ಲಿ ಈ ನಂಬಿಕೆಯು ಪ್ರಣತಿಯ ಬೆಳಕಿನಂತೆ ಅವನನ್ನು ಮುನ್ನಡೆಸಬೇಕು. ಆದರೆ ಪರಿಸ್ಥಿತಿಯ ಕಾಠಿಣ್ಯ ಹೆಚ್ಚಿದರೆ, ಅವನಿಗೆ ದೈವದಲ್ಲಿಯ ನಂಬಿಕೆಯೂ ನಷ್ಟವಾಗಬಹುದು. ಮೊದಲ ನುಡಿಯಲ್ಲಿ ಮುಂಗಾಳು ಎಂದರೆ ಕತ್ತಲೆಯ ಸಂಧಿಕಾಲವನ್ನು ಸೂಚಿಸಿದ ಬೇಂದ್ರೆಯವರು ಎರಡನೆಯ ನುಡಿಯಲ್ಲಿ ಕಗ್ಗತ್ತಲ ರಾತ್ರಿಯಲ್ಲಿ ಬಿರ್ ಎಂದು ಬೀಸುತ್ತಿರುವ ಗಾಳಿಯ ಸಂಕೇತದ ಮೂಲಕ, ಪರಿಸ್ಥಿತಿಯ ಕಾಠಿಣ್ಯ ಹೆಚ್ಚಿರುವದನ್ನು ಸೂಚಿಸುತ್ತಿದ್ದಾರೆ. ಗಾಳಿ ಹೆಚ್ಚಾದರೆ ಹಣತಿಯಲ್ಲಿಯ ಸೊಡರು ತಾನು ತಣ್ಣಗಾದೇನೆಂದು ಅಂದರೆ ಸತ್ತೇ ಹೋಗುವೆನು ಎಂದು ಭಯಪಡುತ್ತದೆ. ಅರ್ಥಾತ್  ನಂಬುಗೆಯೇ ತನ್ನಲ್ಲಿ ನಂಬಿಕೆಯನ್ನು ಕಳೆದುಕೊಳ್ಳುತ್ತಿದೆ ಎಂದು ಬೇಂದ್ರೆ ಹೇಳುತ್ತಾರೆ.
[ಟಿಪ್ಪಣಿ : ನೋಬೆಲ್ ಪ್ರಶಸ್ತಿ ವಿಜೇತ, ರಶಿಯನ್ ಸಾಹಿತಿ ಅಲೆಗ್ಝಾಂಡರ್ ಸೋಲ್ಝೆನಿತ್ಸಿನ್ ಅವರು ತಮ್ಮ Candle in the wind ಎನ್ನುವ ನಾಟಕದಲ್ಲಿ ಮಾನವ-ವಿಶ್ವಾಸದ ಹೆಗ್ಗಳಿಕೆಯನ್ನು ಬರೆದಿದ್ದಾರೆ. ಬಸವಣ್ಣನವರು ತಮ್ಮ ವಚನದಲ್ಲಿ ತಮಂಧ ಘನ, ಜ್ಯೋತಿ ಕಿರಿದೆನ್ನಬಹುದೆ? ಎಂದು ನುಡಿದಿದ್ದಾರೆ. ಆದರೆ ಗಾಳಿ ಬೀಸಿದರೆ, ಜ್ಯೋತಿಯೂ ನಿಲ್ಲಲಾರದು.]

ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿರುವ ಮನುಷ್ಯನು ಅತಿಯಾಗಿ ಬಳಲಿದಾಗ, ನಿದ್ದೆಗೆ ಜಾರುವದು ಸಹಜ. ಆದರೆ, ನಿದ್ದೆಯೂ ಸಹ ಬರಲಾಗದೇ ಒದ್ದಾಡುತ್ತಿದೆ. ಅದೂ ಸಹ ಬಳಲಿ ಬೆಂಡಾಗಿ ಕೊನೆಗೊಮ್ಮೆ ಆಯಾಸದಿಂದ  ಕಣ್ಣುರೆಪ್ಪೆಗಳು ಮುಚ್ಚಿಕೊಳ್ಳುತ್ತವೆ, ನಿದ್ರೆಯು ಆ ಮುಚ್ಚಿದ ರೆಪ್ಪೆಗಳಲ್ಲಿ ಆಸರೆಯನ್ನು ಪಡೆಯುತ್ತದೆ ಎಂದು ಬೇಂದ್ರೆ ಹೇಳುತ್ತಾರೆ. ಈ ರೀತಿಯಲ್ಲಿ  ಮನುಷ್ಯನು ನಿದ್ರೆಗೆ ಜಾರಬಹುದು. ಆದರೆ ಅಪಶಕುನದ ಹೆದರಿಕೆಯಲ್ಲಿರುವ ಮನುಷ್ಯನ ಮನಸ್ಸು ಹೇಗೆ ವರ್ತಿಸುತ್ತದೆ ಎನ್ನುವದನ್ನು ಬೇಂದ್ರೆಯವರು ಮೂರನೆಯ ನುಡಿಯಲ್ಲಿ ಹೀಗೆ ಬಣ್ಣಿಸಿದ್ದಾರೆ :
ನಿದ್ದೆ ಬಳಲಿ ಬಳಿಯಲಿ ಬಂದು
ಕೂಡಿದೆವೆಗಳಾಸರೆಯಲ್ಲಿ
ಮೆsಲ್ಲಗೆ, ಒರಗುವ ಅದನು
ಒಂಟಿ ಸೀನು ಹಾರಿಸುತಿತ್ತ
                   ಶುಭ ನುಡಿಯೆ
ಶುಭ ನುಡಿಯೆ ಶಕುನದ ಹಕ್ಕಿ | ಶುಭ ನುಡಿಯೆ |
ಒಂಟಿ ಸೀನು ಅಪಶಕುನದ ಸಂಕೇತ. ನಿದ್ದೆಗೆ ಜಾರುತ್ತಿರುವ ಮನುಷ್ಯನು ತನ್ನ ಒಂಟಿ ಸೀನಿನಿಂದ ಭಯಗೊಂಡು ತಾನೇ ಎಚ್ಚರಾಗಿ, ಅಪಶಕುನದ ಹೆದರಿಕೆಯಿಂದ ಮತ್ತೆ ಕಳವಳಕ್ಕೀಡಾಗುತ್ತಾನೆ.

ಒಂಟಿ ಸೀನಿನ ಅಪಶಕುನದಿಂದಾಗಿ, ಈ ಬಡಪಾಯಿಗೆ ಹತ್ತುತ್ತಿರುವ ನಿದ್ದೆಯೂ ಹಾರಿಹೋಯಿತು. ಕತ್ತೆತ್ತಿ ಮೇಲೆ ನೋಡಿದರೆ ಅಲ್ಲಿ ಕಾಣುವದೇನು? ಕಪ್ಪು ಆಕಾಶವು ಅವನಿಗೆ ಕತ್ತಲೆಯ ಕೆಸರಿನಂತೆ ಕಾಣುತ್ತಿದೆ. ಅಲ್ಲಿರುವ ಚಿಕ್ಕೆಗಳು ಈತನಿಗೆ ಕಾಣುವ ಪರಿಯನ್ನು ನಾಲ್ಕನೆಯ ನುಡಿಯಲ್ಲಿ ನೋಡಬಹುದು:
ಕತ್ತಲೆಯ ಕೆಸರಿನ ತಳಕೆ
ಮಿನಮಿನಗುವ ಹರಳುಗಳಂತೆ
ಚಿಕ್ಕೆ ಕೆಲವು ತೊಳಗುತಲಿರಲು
ಗಳಕನೊಂದು ಉಲಿಯುತಲಿತ್ತ
                   ಶುಭ ನುಡಿಯೆ
ಶುಭ ನುಡಿಯೆ ಶಕುನದ ಹಕ್ಕಿ | ಶುಭ ನುಡಿಯೆ |

ಚಿಕ್ಕೆಗಳೆಲ್ಲ ತಮ್ಮ ಪ್ರಕಾಶವನ್ನು ಕಳೆದುಕೊಂಡು ಕೆಸರಿನ ತಳದಲ್ಲಿ ಸಿಲುಕಿದ ಹರಳುಗಳಂತೆ ಮಿಣುಕುತ್ತಿವೆ. ಅಲ್ಲಿಂದ ಹೊರಬರಲು ಕೆಲವು ಚಿಕ್ಕೆಗಳು ತೊಳಲಾಡುತ್ತಿವೆ. ದೈವೀ ಭರವಸೆಯನ್ನು ಬಿಂಬಿಸಬೇಕಾದ ಈ ಚಿಕ್ಕೆಗಳೇ ತೊಳಲುತ್ತಿರುವಾಗ, ಮನುಷ್ಯ  ಯಾರಲ್ಲಿ ನಂಬಿಕೆ ಇಡಬೇಕು? ಅಂತಹದರಲ್ಲಿಯೇ ಒಂದು ಚಿಕ್ಕೆ ಗಳಕ್ಕನೇ ಉಲಿದಂತೆ, ಈ ವ್ಯಕ್ತಿಗೆ ಭಾಸವಾಗುತ್ತದೆ. ಆದರೆ ಅದರ ಉಲಿವು ಶುಭಸೂಚಕ ಉಲಿವೊ, ಅಶುಭಸೂಚಕವೋ ಎನ್ನುವದು ಈತನ ಅರಿವಿಗೆ ಬರುತ್ತಿಲ್ಲ. ಕೆಸರಲ್ಲಿ ಸಿಲುಕಿದ ಚಿಕ್ಕೆಗಳಂತೆಯೇ ಈತನ ಮನಸ್ಸೂ ಸಹ ತೊಳಲಾಟದಲ್ಲಿ ಸಿಲುಕಿದೆ.

ಈ ತೊಳಲಾಟವು ಮನುಷ್ಯನನ್ನು ಒಂದು ಅರೆಪ್ರಜ್ಞಾವಸ್ಥೆಯ ಜೊಂಪಿಗೆ ನೂಕುತ್ತದೆ. ಈ ಸ್ಥಿತಿಯನ್ನು ಬೇಂದ್ರೆ ಐದನೆಯ ನುಡಿಯಲ್ಲಿ ಹೀಗೆ ಬಣ್ಣಿಸುತ್ತಾರೆ:
ಉಸಿರು ತೂಗು-ತೊಟ್ಟಿಲಲ್ಲಿ
ಜೀವ ಮೈಯ ಮರೆತಿರಲಾಗಿ
ಒಳಗಿನಾವ ಚಿಂತೆಯ ಎಸರೋ
ತಂತಾನೆ ಕನವರಿಸುತಿತ್ತ
                    ಶುಭ ನುಡಿಯೆ
ಶುಭ ನುಡಿಯೆ ಶಕುನದ ಹಕ್ಕಿ | ಶುಭ ನುಡಿಯೆ |

ಈ ಅರೆಪ್ರಜ್ಞಾವಸ್ಥೆಯಲ್ಲಿ ಮನುಷ್ಯನ ಉಳಿದೆಲ್ಲ ಐಚ್ಛಿಕ ಕ್ರಿಯೆಗಳು ಸ್ತಬ್ಧವಾಗಿ, ಕೇವಲ ಉಸಿರಾಟವಷ್ಟೆ ವ್ಯಕ್ತವಾಗುತ್ತಿರುತ್ತದೆ. ಒಳಉಸಿರು ಹಾಗು ಹೊರ‌ಉಸಿರುಗಳನ್ನು ಬೇಂದ್ರೆ ತೂಗುತೊಟ್ಟಿಲು ಎಂದು ಬಣ್ಣಿಸುತ್ತಾರೆ. ಈ ತೂಗುತೊಟ್ಟಿಲಿನಲ್ಲಿ ಜೀವಿ ಮೈಮರೆತು ಮಲಗಿಕೊಂಡಿರುತ್ತಿದೆ. ಇದು ಗಾಢನಿದ್ದೆಯ ಸ್ಥಿತಿ. ಬಳಲಿಕೆಯನ್ನು ಪರಿಹರಿಸಲು ಇಂತಹ ಗಾಢನಿದ್ರೆಯು ಮನುಷ್ಯನನ್ನು ಆವರಿಸುತ್ತದೆ. ಆದರೆ ಒಳಒಳಗೇ ಕುದಿಯುತ್ತಿರುವ ಚಿಂತೆಯು ಹೊರಗೆ ಉಕ್ಕಿ ಬರಲೇ ಬೇಕಲ್ಲ. ಅದನ್ನು ಬೇಂದ್ರೆಯವರು  ಚಿಂತೆಯ ಎಸರು ಎಂದು ಬಣ್ಣಿಸುತ್ತಾರೆ. ಈ ಎಸರು ಉಕ್ಕಿ ಹೊರಬಂದಾಗ ಮಲಗಿಕೊಂಡಿರುವ ಮನುಷ್ಯನು ಕನವರಿಸುತ್ತಾನೆ. ಈತನ ಕನವರಿಕೆಯ ಆಶಯ ಒಂದೇ: ಶುಭ ನುಡಿಯೆ ಶಕುನದ ಹಕ್ಕಿ, ಶುಭ ನುಡಿಯೆ!

ಆರನೆಯ ನುಡಿ ಹೀಗಿದೆ:
ನಟ್ಟಿರುಳಿನ ನೆರಳಿನಲ್ಲಿ
ನೊಂದ ಜೀವ ಮಲಗಿರಲಾಗಿ
ಸವಿಗನಸು ಕಾಣುವಾಗ
ಗೂಗೆಯೊಂದು ಘೂಕ್ಕೆನುತಿತ್ತ
                   ಶುಭ ನುಡಿಯೆ
ಶುಭ ನುಡಿಯೆ ಶಕುನದ ಹಕ್ಕಿ | ಶುಭ ನುಡಿಯೆ |

ಹಗಲು ಮನುಷ್ಯನನ್ನು ಹಿಂಡಬಹುದಾದ ಸಮಯವಾದರೆ, ಇರುಳು ಆತನಿಗೆ ನಿದ್ದೆಯ ನೆಮ್ಮದಿಯನ್ನು ಕೊಡುವ ಸಮಯ. ಅಂತಲೇ ಬೇಂದ್ರೆಯವರು ನಟ್ಟಿರುಳಿನ(=ನಡು ಇರುಳಿನ=ಮಧ್ಯ ರಾತ್ರಿಯ) ಸಮಯವನ್ನು ನೆರಳು ಎಂದು ಬಣ್ಣಿಸುತ್ತಾರೆ. ನೊಂದ ಜೀವವು ಈ ನೆರಳಿನಲ್ಲಿ ನೆಮ್ಮದಿಯನ್ನು ಪಡೆದು ಸವಿಗನಸು ಕಾಣುತ್ತಿರುತ್ತದೆ. ಆದರೆಮಧ್ಯರಾತ್ರಿಯು ಗೂಗೆಗೆ ಜಾಗರಣೆಯ ಸಮಯವಲ್ಲವೇ! ಹಾಗಾಗಿ ಇದೇ ಹೊತ್ತಿನಲ್ಲಿ ಗೂಗೆಯೊಂದರ ಘೂಕ್ ಎನ್ನುವ ಧ್ವನಿ ನೊಂದವನನ್ನು ಎಚ್ಚರಿಸಿ, ಅಪಶಕುನದ ಸೂಚನೆಯಾಗಿ ಮತ್ತೆ ಕಾಡುತ್ತದೆ.

ಆ ಸಂದರ್ಭದ ಮನೋಸ್ಥಿತಿಯನ್ನು ಬೇಂದ್ರೆಯವರು ಏಳನೆಯ ನುಡಿಯಲ್ಲಿ ಹೀಗೆ ಬಣ್ಣಿಸಿದ್ದಾರೆ:
ಎಚ್ಚರಾದ ಪೆಚ್ಚು ಮನವು
ಹುಚ್ಚೆದ್ದು ಹರಿಯುತಿರಲು
ನಿದ್ದೆಯಿಲ್ಲ ಆಕಳಿಸಿದರೂ
ಹಲ್ಲಿಯೊಂದು ಲೊಟಗುಡತಿತ್ತ
                 ಶುಭ ನುಡಿಯೆ
ಶುಭ ನುಡಿಯೆ ಶಕುನದ ಹಕ್ಕಿ | ಶುಭ ನುಡಿಯೆ |
ಅಪಶಕುನದ ಧ್ವನಿಯಿಂದಾಗಿ ಎಚ್ಚರಾದ ಜೀವಿಯು ಏನು ಮಾಡುವದೆಂದು ತಿಳಿಯದೆ ಪೆಚ್ಚಾಗಿ ಕೂರುತ್ತಾನೆ. ಆತನ ಮನಸ್ಸಿಗೆ ಒಂದು ಗುರಿ ಇಲ್ಲದಂತಾಗಿ, ಅದು ಹುಚ್ಚೆದ್ದು ಎಲ್ಲೆಡೆಗೂ ಹರಿಯುತ್ತದೆ. ಆಕಳಿಕೆಗಳು ಬರುತ್ತಲೇ ಇರುತ್ತವೆ. ಆದರೆ ನಿದ್ದೆ ಮಾತ್ರ ಬಾರದು. ಇದೇ ಹೊತ್ತಿನಲ್ಲಿ ಗೋಡೆಯ ಮೇಲಿನ ಹಲ್ಲಿಯೊಂದು ಲೊಚಗುಡುತ್ತದೆ. ಇದು ಮತ್ತೊಂದು ಅಪಶಕುನ!

ಎಂಟನೆಯ ನುಡಿ ಹೀಗಿದೆ:
ಬೆಳಗಿನ ತಂಗಾಳಿ ಬಂದು
ನಸುಕು ಮಸುಕು ಮೂಡುತಲಿರಲು
ಚಿಲೀ ಪಿಲೀ ಚಿಲಿಪಿಲಿ ಎಂದು
ಹಾಲಕ್ಕಿ ಉಲಿಯುತಲಿತ್ತ
                 ಶುಭ ನುಡಿಯೆ
ಶುಭ ನುಡಿಯೆ ಶಕುನದ ಹಕ್ಕಿ | ಶುಭ ನುಡಿಯೆ |

ಅಂತೂ ಇಂತೂ ಬೆಳಗು ಮೂಡುತ್ತದೆ. ಆದರೆ ನಸುಕು ಇನ್ನೂ ಮಸುಕಾಗಿಯೇ ಇದೆ. ಬೆಳಗಿನ ತಂಗಾಳಿಯು ಸ್ವಲ್ಪ ಮಟ್ಟಿಗಾದರೂ ಉಲ್ಲಾಸವನ್ನು ಮೂಡಿಸಬೇಕು. ಬದುಕಿನ ಸಂಕೇತಗಳಾದ ಹಕ್ಕಿಗಳು ಚಿಲಿಪಿಲಿಗುಟ್ಟುತಿವೆ. ಇವುಗಳ ಜೊತೆಗೇ ಅಪಶಕುನದ ಹಕ್ಕಿಯಂದೇ ಕರೆಯಲಾದ ಹಾಲಕ್ಕಿಯೂ ಸಹ ತನ್ನ ಧ್ವನಿಯನ್ನು ಈ ಚಿಲಿಪಿಲಿಗೆ ಸೇರಿಸಿದೆ! ಅಪಶಕುನಗಳು ಈ ರೀತಿ ಬೆಂಬತ್ತಿರುವಾಗ, ಮನುಷ್ಯನು ದೈವದಲ್ಲಿ ಹೇಗೆ ನಂಬಿಗೆ ಇಟ್ಟಾನು?

ಕೊನೆಯ ನುಡಿಯಲ್ಲಿ ಬೇಂದ್ರೆಯವರು ದೈವಕ್ಕೆ ಶರಣು ಹೋಗದೇ, ಬೇರೆ ಮಾರ್ಗವಿಲ್ಲವೆಂದು ಹೇಳುತ್ತಾರೆ :
ನಿನ್ನ ಸೊಲ್ಲ ನಂಬಿ ಎದ್ದೆ
ಮೈಯೆಲ್ಲ ನಡುಕವಿದ್ದು
ನೀನೆ ಶುಭ ನುಡಿಯುವಾಗ
ಏನಿದ್ದೇನು? ಎಲ್ಲಾ ಶುಭವೇ !
                  ಶುಭ ನುಡಿಯೆ
ಶುಭ ನುಡಿಯೆ ಶಕುನದ ಹಕ್ಕಿ | ಶುಭ ನುಡಿಯೆ |

ದೇವರಲ್ಲಿ ವಿಶ್ವಾಸ ಇಟ್ಟೇ ಮನುಷ್ಯನು ಏಳಬೇಕಾಗುತ್ತದೆ, ಅಂದರೆ ತನ್ನ ಪ್ರಯತ್ನಗಳಿಗೆ ಸಿದ್ಧನಾಗಬೇಕಾಗುತ್ತದೆ. ಆ ಪ್ರಯತ್ನಗಳು ಫಲಿಸಲಿಕ್ಕಿಲ್ಲ ಎನ್ನುವ ಹೆದರಿಕೆಯನ್ನು ಬೇಂದ್ರೆ ಮೈಯೆಲ್ಲ ನಡುಕವಿದ್ದು ಎಂದು ಹೇಳುವ ಮೂಲಕ ಸೂಚಿಸುತ್ತಾರೆ. ಅಪಶಕುನಗಳ ಸರಣಿಯೇ ಈ ಹೆದರಿಕೆಗೆ ಕಾರಣ. ಈ ಹೆದರಿಕೆಯನ್ನು ಮೆಟ್ಟಲು ಆತ ತನಗೆ ತಾನೆ ಅಂದುಕೊಳ್ಳುತ್ತಾನೆ: ದೇವರೆ, ನಾನು ನಿನಗೆ ಶರಣು ಬಂದಿರುವಾಗ, ಶುಭಶಕುನವನ್ನು ನೀನೇ ನುಡಿಯುವಿ. ಆ ಸಮಯದಲ್ಲಿ ಉಳಿದ ಅಪಶಕುನಗಳಿಗೆ ಬೆಲೆ ಎಲ್ಲಿದೆ? 
ದೇವರಲ್ಲಿ ಅಚಲ ನಂಬಿಕೆ ಇದ್ದಾಗೆ ಎಲ್ಲವೂ ಶುಭವೇ.
....................................................................................

ಕಳವಳದ ಕತ್ತಲಲ್ಲಿ ಮುಳುಗಿದ ಮನಸ್ಸು ಬೆಳಕಿನ ಕಿರಣ ಕಂಡೀತೇನೊ ಎಂದು ಹಂಬಲಿಸುತ್ತಿರುತ್ತದೆ. ಶುಭಶಕುನಗಳು ಬೆಳಕು ಬಂದೀತೆನ್ನುವ ಭರವಸೆಯಾಗಿವೆ. ಆದರೆ ಅಪಶಕುನಗಳೇ ಸುತ್ತಲೆಲ್ಲ ಮುತ್ತುತ್ತಿರುವಾಗ ಮನಸ್ಸು ಮತ್ತೆ ಮತ್ತೆ ತಳಮಳದಲ್ಲಿ ಮುಳುಗುತ್ತದೆ. ಶುಭಶಕುನಗಳಿಗಾಗಿ ಹಾತೊರೆಯುತ್ತದೆ. ಇಂತಹ ಮನೋಸ್ಥಿತಿಯ ಚಿತ್ರಣ ಈ ಕವನದಲ್ಲಿದೆ.

{ಟಿಪ್ಪಣಿ: ಕಳವಳಿಸುತ್ತಿರುವ ಮನಸ್ಸನ್ನು ಚಿತ್ರಿಸುವ ಕವನಗಳು ಕಡಿಮೆ. ಮನಸ್ಸು ನಿರಾಶೆಯಲ್ಲಿ ಸಿಲುಕಿದಾಗ, ಮತ್ತೆ ಮೇಲೆತ್ತುವಂತಹ ಕವನವನ್ನು ಶ್ರೀ ವಿವೇಕಾನಂದರು ಬರೆದಿದ್ದಾರೆ. `Hold on yet a while brave heart, the victory is sure to come ಎನ್ನುವ ಅವರ ಕವನವನ್ನು ಓದುವ ಕೊಂಡಿ ಇಲ್ಲಿದೆ.]

Monday, January 10, 2011

ಎರಡು ಲೇಖನಗಳು : ಒಂದು ಪ್ರಶ್ನೆ

ನಮ್ಮ ಸಮಾಚಾರ ಪತ್ರಿಕೆಗಳಲ್ಲಿ ಎರಡು ಲೇಖನಗಳು ಅಲ್ಪಕಾಲಾಂತರದಲ್ಲಿ ಪ್ರಕಟವಾಗಿರುವದು, ಈ ವಿಷಯಕ್ಕೆ ನಮ್ಮ ‘ವಿಚಾರವಾದಿ’ಗಳು ಕೊಡುತ್ತಿರುವ ಮಹತ್ವವನ್ನು ತೋರಿಸುತ್ತದೆ.  ಮೊದಲನೆಯದು ಜನೆವರಿ ಐದನೆಯ ದಿನಾಂಕದ ಪ್ರಜಾವಾಣಿಯಲ್ಲಿ ಪ್ರಕಟವಾಗಿದೆ. ಎರಡನೆಯದು ಜನೆವರಿ ಒಂಬತ್ತನೆಯ ದಿನಾಂಕದ ಸಂಯುಕ್ತ ಕರ್ನಾಟಕದ ಸಾಪ್ತಾಹಿಕ ಪುರವಣಿಯಲ್ಲಿ ಪ್ರಕಟವಾಗಿದೆ. ಪ್ರಜಾವಾಣಿಯ  ಅಂಕಣದ ಲೇಖಕರು ಶ್ರೀ ಅನಂತಮೂರ್ತಿ. ಸಂಯುಕ್ತ ಕರ್ನಾಟಕದಲ್ಲಿ ಬರೆದವರು ಶ್ರೀ ಕೆ.ಎಸ್. ಶರ್ಮಾ. ಎರಡೂ ಲೇಖನಗಳ ಹೂರಣ ಒಂದೇ: ಇತ್ತೀಚೆಗೆ ಸೆರೆಮನೆಯ ಶಿಕ್ಷೆಗೆ ಒಳಗಾದ ವಿನಾಯಕ ಸೇನರ ಪರವಾದ ವಕಾಲತ್ತು.

ಮೊದಲಿಗೆ ಶ್ರೀ ಶರ್ಮಾ ಅವರ ಲೇಖನವನ್ನು ಓದಿ:





ಶ್ರೀಮಾನ್ ಕೆ.ಎಸ್.ಶರ್ಮಾ ಅವರ ಬಗೆಗೆ ನನಗೆ ತುಂಬ ಗೌರವವಿದೆ. ಅವರು ಕಾನೂನು ಪರಿಣತರು ಹಾಗು ಕರ್ನಾಟಕದ ದಿನಗೂಲಿ ಆಂದೋಲನದ ಪ್ರಮುಖ ನಾಯಕರು. ಆದರೆ ಮೂಲತಃ ಮಾರ್ಕ್ಸವಾದಿಯಾದ ಶರ್ಮಾ ದೇಶದ ಎಲ್ಲ ಸಮಸ್ಯೆಗಳನ್ನು ಹಾಗು ಪರಿಹಾರಗಳನ್ನು ತಮ್ಮ ಮಾರ್ಕ್ಸವಾದದ ದೃಷ್ಟಿಕೋನದಿಂದಲೇ ನೋಡಬಯಸುತ್ತಾರೆ. ಈ ಸಂದರ್ಭದಲ್ಲಿ ನಾವು ರಶಿಯದ ಹಾಗು ಚೀನಾದ ಮಾರ್ಕ್ಸವಾದಿಗಳಿಗೂ ಭಾರತೀಯ ಮಾರ್ಕ್ಸವಾದಿಗಳಿಗೂ ಇರುವ ಅಂತರವನ್ನು ಗಮನಿಸುವದು ಅವಶ್ಯಕ. ರಶಿಯದ ಹಾಗು ಚೀನಾದ ಮಾರ್ಕ್ಸವಾದಿಗಳು ತಮ್ಮ ದೇಶದ ಹಿತಾಸಕ್ತಿಯನ್ನು ತಿಳಿದುಕೊಂಡವರು ಹಾಗು ಕಟ್ಟಾ ದೇಶಾಭಿಮಾನಿಗಳು. ಭಾರತೀಯ ಮಾರ್ಕ್ಸವಾದಿಗಳಿಗೆ ದೇಶದ ಹಿತಕ್ಕಿಂತಲೂ ಮಾರ್ಕ್ಸವಾದದ ಹಿತವೇ ಮುಖ್ಯವಾಗಿದೆ.

ನನ್ನ ಅಭಿಪ್ರಾಯಕ್ಕೆ ಪುಷ್ಟಿ ಕೊಡಲು ನಾನು ಬಂಗಾಲ ಹಾಗು ಕೇರಳ ರಾಜ್ಯಗಳ ಉದಾಹರಣೆಯನ್ನು ಕೊಡಬಯಸುತ್ತೇನೆ. ಬಂಗಾಲದಲ್ಲಿ ಅನೇಕ ವರ್ಷಗಳಿಂದ ಆಳುವ ಕಮ್ಯುನಿಸ್ಟ ಪಕ್ಷದ ಕಾರ್ಯಕರ್ತರು ನಡೆಸುತ್ತಿರುವ ಹಿಂಸಾಚಾರ ಹಾಗು ಆ ರಾಜ್ಯದ ಪೋಲೀಸರು ಮುಗ್ಧ ರೈತರ ಮೇಲೆ ಮತ್ತು ಸಾಮಾನ್ಯ ಜನತೆಯ ಮೇಲೆ ಮಾಡುತ್ತಿರುವ ಅತ್ಯಾಚಾರಗಳು ಶರ್ಮಾರವರಿಗೆ ಗೊತ್ತಿಲ್ಲವೆ? ಕೇರಳದಲ್ಲಿ  ಆಳುವ ಪಕ್ಷದ ಕೆಲವು ಧುರೀಣರು ರತಿಹಿಂಸೆಯಲ್ಲಿ ತೊಡಗಿಕೊಂಡಿದ್ದು ಹಾಗು ಅಲ್ಲಿ ಶ್ರೀ ಜೋಸೆಫ್ ಎನ್ನುವ ಉಪನ್ಯಾಸಕರ ಕೈಗಳನ್ನು ಉಗ್ರವಾದಿಗಳು ಕತ್ತರಿಸಿದ್ದದ್ದು ಇವರಿಗೆ ಗೊತ್ತಿಲ್ಲವೆ?  ಈ ಘಟನೆಗಳು ಮಾನವ ಹಕ್ಕುಗಳ ಉಲ್ಲಂಘನೆ ಅಲ್ಲವೆ? ಈ ಎಲ್ಲ ಸಂದರ್ಭಗಳಲ್ಲಿ ತುಟಿಗಳನ್ನೂ ಸಹ ಅಲುಗಾಡಿಸದ ಶರ್ಮಾ ಅವರು ವಿನಾಯಕ ಸೇನರಿಗೆ ಭಾರತೀಯ ನ್ಯಾಯಾಲಯವು ಶಿಕ್ಷೆ ನೀಡಿದ್ದಕ್ಕಾಗಿ ಗುಡುಗುತ್ತಿದ್ದಾರೆ.

ವಿನಾಯಕ ಸೇನರು ಉತ್ತಮ ವೈದ್ಯರಿರಬಹುದು, ಆದಿವಾಸಿಗಳ ಸೇವೆಯನ್ನು ನಿ:ಸ್ಪೃಹರಾಗಿ ಮಾಡಿರಬಹುದು. ಆದರೆ ಈ ದೇಶದ ಕಾನೂನನ್ನು ಅವರು ಭಂಗಿಸಿದ್ದರೆ, ಅವರಿಗೆ ತಕ್ಕ ಶಿಕ್ಷೆಯಾಗಲೇ ಬೇಕು. ಸೇನರೇ ಆಗಲಿ, ಶರ್ಮಾರೇ ಆಗಲಿ ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಅಲ್ಲದೆ ನ್ಯಾಯಾಲಯವು ಕಾನೂನಿನ ಎಲ್ಲ ಮುಖಗಳ ದೀರ್ಘ ಅಧ್ಯಯನದ ನಂತರವೇ ತೀರ್ಪು ನೀಡುತ್ತದೆ. ಈ ತೀರ್ಪನ್ನು ನಾವು ಗೌರವಿಸಬೇಡವೆ? ನಮಗೆ ಬೇಡವಾದ ತೀರ್ಪಿಗಾಗಿ ನ್ಯಾಯಾಲಯವನ್ನು ಟೀಕಿಸುವದು ಸರಿಯೆ? ಈ ತೊಡಕನ್ನು ಬದಿಗೆ ಸರಿಸಲೆಂದೇ ಶರ್ಮಾ ಬೇರೊಂದು ಉಪಾಯ ಹುಡುಕುತ್ತಾರೆ. ಅದೇನೆಂದರೆ : ಭಾರತದ ಕಾನೂನುಗಳೇ ಸರಿಯಾಗಿಲ್ಲ! ನಮ್ಮ ಕಾನೂನುಗಳು ಮಾನವತಾವಿರೋಧಿಯಾಗಿವೆ! ಯಾಕೆ ಸ್ವಾಮಿ? ಈಗಿರುವ ಕಾನೂನುಗಳ ಮೂಲಕ ಎಷ್ಟು ದೇಶದ್ರೋಹಿಗಳನ್ನು ನೀವು ಶಿಕ್ಷೆಗೆ ಒಳಪಡಿಸಿದ್ದೀರಿ? ಅಫಝಲ್ ಗುರು, ಕಸಬರಂತಹ ಭಯೋತ್ಪಾದಕರು  ಸೆರೆಮನೆ ಎನ್ನುವ ಅರಮನೆಗಳಲ್ಲಿ ಆರಾಮಾಗಿ ಕಾಲಕ್ಷೇಪ ಮಾಡುತ್ತಿಲ್ಲವೆ? ಇದಕ್ಕಿಂತ ಮಾನವತಾವಾದಿ ಕಾನೂನು ಯಾವ ದೇಶದಲ್ಲಿ ನಿಮಗೆ ಸಿಕ್ಕೀತು?

ಎರಡನೆಯದಾಗಿ ಸೇನರ ಬೆಂಬಲಕ್ಕೆ ನಿಂತಂತಹ ಮಾನವ ಹಕ್ಕುಗಳ ಸಂಘಟನೆಗಳ ದೊಡ್ಡ ಪಟ್ಟಿಯನ್ನೇ ಶರ್ಮಾ ಕೊಟ್ಟಿದ್ದಾರೆ. ಶರ್ಮಾರಿಗೆ ಹಾಗು ಈ ಸಂಘಟನೆಗಳಿಗೆ ಭಾರತದಲ್ಲಿ ಸಂಚಾರ ನಿಯಂತ್ರಿಸುವ ಪೋಲೀಸನೂ ಸಹ ಮಾನವ ಹಕ್ಕುಗಳನ್ನು ಉಲ್ಲಂಘಿಸುವ ಸರ್ವಾಧಿಕಾರಿಯಂತೆ ಕಾಣುತ್ತಾನೆ. ಇವರಿಗೆ ರಶಿಯಾ ಹಾಗು ಚೀನಾದಲ್ಲಿ ನಡೆಯುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಕಾಣುವದಿಲ್ಲ. ಅಮೇರಿಕಾ ಎಷ್ಟೆಲ್ಲ ದೇಶಗಳ ಅಮಾಯಕ ನಾಗರಿಕರ ಮೇಲೆ ವರ್ಷ ವರ್ಷವೂ ಬಾಂಬು ಸುರಿಸುವದು ಕಾಣುವದಿಲ್ಲ. ಆಸ್ಟ್ರೇಲಿಯಾದಲ್ಲಿ ವರ್ಣೀಯ ಹಿಂಸೆ ನಡೆಯುತ್ತಿರುವದು ಕಾಣುವದಿಲ್ಲ. ನಮ್ಮ ದೇಶದ ನ್ಯಾಯಾಲಯದಲ್ಲಿ ಅಪರಾಧ ಸಾಬೀತಾದ ಒಬ್ಬ ಅಪರಾಧಿಯನ್ನು ಸೆರೆಮನೆಗೆ ಕಳುಹಿಸಿದರೆ ಮಾತ್ರ ಅದು ಮಾನವ ಹಕ್ಕುಗಳ ಘೋರ ಉಲ್ಲಂಘನೆಯಾಗುತ್ತದೆ! ಇದಲ್ಲದೆ, ಅನೇಕ  ಮಾನವ ಹಕ್ಕುಗಳ ಸಂಘಟನೆಗಳು ವಿವಿಧ ದೇಶಗಳ ಗುಪ್ತಚಾರ ಸಂಸ್ಥೆಗಳ ಮುಖವಾಡಗಳು ಎನ್ನುವದು ಶರ್ಮಾರಿಗೆ ಗೊತ್ತಿಲ್ಲವೆ? ಭಾರತೀಯ ಸಮಾಜವನ್ನು ಒಡೆಯುವದು ಹಾಗು ಭಾರತದ ಆಡಳಿತವನ್ನು ಬುಡಮೇಲು ಮಾಡುವದೇ ಈ ಸಂಸ್ಥೆಗಳ ಉದ್ದೇಶ ಎನ್ನುವದು  ಶರ್ಮಾರಿಗೆ ಗೊತ್ತಿಲ್ಲವೆ?

ಕೆಳಗಿನ ನ್ಯಾಯಾಲಯವು ಶಿಕ್ಷೆ ವಿಧಿಸಿದಾಗ, ಮೇಲಿನ ನ್ಯಾಯಾಲಯಕ್ಕೆ ಅಪೀಲು ಮಾಡಿಕೊಳ್ಳಲು ಕಾನೂನಿನಲ್ಲಿ ಅವಕಾಶವಿರುತ್ತದೆ. ವಿನಾಯಕ ಸೇನರು ಸಾಧ್ಯವಿದ್ದರೆ ಆ ಅವಕಾಶವನ್ನು ಬಳಸಿಕೊಳ್ಳಬಹುದು. ಅಂತಹ ನೇರಮಾರ್ಗವನ್ನು ಬಿಟ್ಟು ನಮ್ಮ ನ್ಯಾಯವ್ಯವಸ್ಥೆಯನ್ನು ಹಾಗು ನ್ಯಾಯಾಲಯಗಳನ್ನು ದೂಷಿಸುವದು ಶರ್ಮಾರಂತಹ ಕಾನೂನುಪಂಡಿತರಿಗೆ ಭೂಷಣವಲ್ಲ.  ಇಂತಹ ವಿಧಾನವನ್ನು ಅನುಸರಿಸುವದರಿಂದಲೇ ಅರುಂಧತಿ ರಾಯರಂತಹ ವ್ಯಕ್ತಿಗಳಿಗೆ ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ಮಿಂಚುವದು ಸಾಧ್ಯವಾಗಿದೆ. ಆದರೆ ಈ ಸ್ವಾರ್ಥಿಗಳ ಮಹತ್ವಾಕಾಂಕ್ಷೆಗಾಗಿ ನಮ್ಮ ದೇಶ ಎಂತಹ ಬೆಲೆ ತೆರಬೇಕಾಗುತ್ತದೆ ಎನ್ನುವದು ಶರ್ಮಾರಿಗೆ ಗೊತ್ತಿಲ್ಲವೆ? ಶರ್ಮಾ ಕೀರ್ತಿಕಾಂಕ್ಷಿ ಅಲ್ಲ ಎನ್ನುವದು ನನಗೆ ಗೊತ್ತಿದೆ. ಬದುಕಿನುದ್ದಕ್ಕೂ ಅಪ್ಪಿಕೊಂಡು ಬಂದ ಮಾರ್ಕ್ಸವಾದವನ್ನು ಸಮರ್ಥಿಸುವ ಸಲುವಾಗಿ, ದೇಶದ ಕಾನೂನುಗಳನ್ನು ಹೀಯಾಳಿಸುವ ಕಸರತ್ತನ್ನು ಶರ್ಮಾ ಮಾಡುತ್ತಿದ್ದಾರೆಯೆ?

ಶರ್ಮಾ ಅವರ ದೃಷ್ಟಿಕೋನ ಹೇಗೇ ಇರಲಿ, ಅವರ ಬರಹದಲ್ಲಿ ಸರಳತೆ ಇದೆ, ಸಾಕಷ್ಟು ಮಾಹಿತಿ ಇದೆ ಹಾಗು ತಾವು ನಂಬಿರುವದು ಏನು ಎನ್ನುವದರ ಸ್ಪಷ್ಟತೆ ಇದೆ. ನನ್ನ ನಂಬಿಕೆ ಬೇರೆಯಾಗಿರುವದರಿಂದ ಅವರ ಅಭಿಪ್ರಾಯವನ್ನು ನಾನು ಒಪ್ಪುವದಿಲ್ಲ, ಅಷ್ಟೇ. 
ಈಗ ಶ್ರೀ ಅನಂತಮೂರ್ತಿಯವರ ಲೇಖನವನ್ನು (ಪ್ರಜಾವಾಣಿ, ೫ನೆಯ ಜನೆವರಿ) ನೋಡಿರಿ.


ಅನಂತಮೂರ್ತಿಯವರು ಕ್ಲಿಷ್ಟ ಶೈಲಿಯಲ್ಲಿ ಲೇಖನವನ್ನು ಬರೆಯಲು ಇಷ್ಟ ಪಡುತ್ತಾರೆ. ಹಾಗೆ ಮಾಡುವದರಿಂದ ತಮ್ಮ ಲೇಖನವು ಕೃತಕ ಸಂಕೀರ್ಣತೆಯನ್ನು ಪಡೆದು, ಪಾಂಡಿತ್ಯಪೂರ್ಣವಾಗಿ ಕಂಗೊಳಿಸುವದು ಎನ್ನುವದು ಅವರ ಭ್ರಮೆಯಾಗಿದೆ. ಮಾಹಿತಿಶೂನ್ಯವಾಗಿರುವ ತಮ್ಮ ಲೇಖನದಲ್ಲಿ ಪಾಂಡಿತ್ಯವನ್ನು ಸೃಷ್ಟಿಸುವ ಉದ್ದೇಶದಿಂದ ಅನಂತಮೂರ್ತಿಯವರು ಭೀಷ್ಮ ಹಾಗು ವಿಭೀಷಣರ ರೂಪಕಗಳನ್ನು ಬಳಸಿಕೊಂಡಿದ್ದಾರೆ ಎನ್ನಬಹುದು. ಈ ರೂಪಕಗಳನ್ನು ಒಟ್ಟಾಗಿ ನೋಡಬೇಕೆಂದು ಅವರು ನಮಗೆ ಸೂಚನೆ ಇತ್ತಿದ್ದಾರೆ. ಕೊನೆಗೊಮ್ಮೆ ಸುತ್ತು ಬಳಸಿ ನಕ್ಸಲರು ಕೆಟ್ಟವರೇನಲ್ಲ , ನಮ್ಮ ರಾವಣ ವ್ಯವಸ್ಥೆಯನ್ನು ಬದಲಾಯಿಸಲು (ಶ್ರೀರಾಮಚಂದ್ರನಂತೆ?) ಹೋರಾಡುತ್ತಿರುವವರು ಎಂದು ಶರಾ ಹಾಕುತ್ತಾರೆ. ಈ ನಕ್ಸಲವಾದಿಗಳು ಕರ್ನಾಟಕದಲ್ಲಿ ಮಾಡುತ್ತಿರುವ ಮಹಾಕ್ರಾಂತಿಯಲ್ಲಿ ಈವರೆಗೂ ಪ್ರಾಣ ತೆತ್ತಿರುವವರು ಯಾರು? ಅಮಾಯಕ ಹಳ್ಳಿಗರೊ ಅಥವಾ (ನೀಚ!) ಬಂಡವಾಳಶಾಹಿಗಳೊ? ಸ್ವತಃ ಅನಂತಮೂರ್ತಿಯವರು ಯಾವ ವರ್ಗದಲ್ಲಿ ಸೇರಿದ್ದಾರೆ? ರಾಜಧಾನಿಯ ಡಾಲರ್ ಕಾಲನಿಯಲ್ಲಿ ಮನೆ ಕಟ್ಟಿಕೊಂಡವರನ್ನು, ದುಬಾರಿ ಮದ್ಯಪಾನ ಮಾಡುವ ಶಕ್ತಿಯುಳ್ಳವರನ್ನು  ಯಾವ ವರ್ಗದಲ್ಲಿ ಸೇರಿಸಬಹುದು? ರಾವಣನ ರಾಜ್ಯಭಾರದಲ್ಲಿ ಅವನ ಭಟ್ಟಂಗಿಯಾಗಿ, ಸಕಲ ಸವಲತ್ತುಗಳನ್ನು ಪಡೆದುಕೊಂಡು ವಿಭೀಷಣನ ಹೆಸರು ಹೇಳುವವರನ್ನು ಯಾವ ಗುಂಪಿಗೆ ಸೇರಿಸಬೇಕು? ಹಾಗಿದ್ದರೆ ಅನಂತಮೂರ್ತಿಯವರು ಯಾತಕ್ಕಾಗಿ ವಿನಾಯಕ ಸೇನರ ಪರವಾಗಿ ವಕಾಲತ್ತು ಮಾಡಲು ಬಯಸುತ್ತಾರೆ? ನನಗೆ ತೋರಿದ್ದನ್ನು ಮೊದಲೇ ಹೇಳಿದ್ದೇನೆ. ದೇಶದ್ರೋಹಿಗಳ ಪರವಾಗಿ ನೀವು ಮಾನವತಾವಾದದ ಬುರುಡೆಯನ್ನು ಉರುಳಿಸಿದರೆ, ನೀವು ಅಂತರರಾಷ್ಟ್ರೀಯ ರಂಗದಲ್ಲಿ ಮಿಂಚಬಹುದು. ಈ ಮಾರ್ಗವನ್ನು ಅರುಂಧತಿ ರಾಯ ಚೆನ್ನಾಗಿ ಬಳಸಿಕೊಂಡಿದ್ದಾರೆ. ಅನಂತಮೂರ್ತಿಯವರಿಗೂ ಈ ಮಾರ್ಗ ಹೊಸದೇನಲ್ಲ.

Tuesday, December 28, 2010

‘ಹೂತsದ ಹುಣಸಿ’...............ದ.ರಾ.ಬೇಂದ್ರೆ

ಆಧುನಿಕ ನಾಗರಿಕತೆಯು  ಬಕಾಸುರನೂ ಹೌದು , ಭಸ್ಮಾಸುರನೂ ಹೌದು. ನಿಸರ್ಗದ ಸಂಪತ್ತನ್ನೆಲ್ಲ ಬಕಾಸುರನಂತೆ ನುಂಗುತ್ತಿರುವ ಈ ನಾಗರಿಕತೆಯು ಭಸ್ಮಾಸುರನಂತೆ ಸಾಂಸ್ಕೃತಿಕ ವಿನಾಶವನ್ನು ಮಾಡುತ್ತ ನಡೆದಿದೆ. ಇಂತಹ (ಅ)ನಾಗರಿಕ ವಾತಾವರಣದಲ್ಲಿ ಬದುಕುವ ಜೀವಿಯು ಪ್ರತಿ ದಿನವೂ ಉದ್ವಿಗ್ನತೆಯಲ್ಲಿ ಹಪಹಪಿಸುವದನ್ನು ನಾವು ಕಾಣುತ್ತಲೇ ಇದ್ದೇವೆ. ಈಗಿನ ನಗರಜೀವನವು ತನ್ನ ನಿವಾಸಿಗಳನ್ನು ಅನೇಕ ಮನೋವಿಕಾರಗಳಿಗೆ ಈಡು ಮಾಡಿದೆ ಎಂದು ಹೇಳಿದರ ತಪ್ಪಾಗಲಿಕ್ಕಿಲ್ಲ.

ಔದ್ಯೋಗೀಕರಣದ ಹಾಗು ನಗರೀಕರಣದ ಮೊದಲಿನ ಪರಿಸ್ಥಿತಿ ಹೀಗಿರಲಿಲ್ಲ. ಗ್ರಾಮೀಣ ಜೀವನವು ಪ್ರಶಾಂತವಾಗಿರುತ್ತಿತ್ತು. ಹಳ್ಳಿಗರು ಸುತ್ತಲಿನ ಪ್ರಕೃತಿಯೊಡನೆ ತಾದಾತ್ಮ್ಯತೆಯನ್ನು ಅನುಭವಿಸುತ್ತಿದ್ದರು. ವರಕವಿ ಬೇಂದ್ರೆಯವರು  ತಮ್ಮ ‘ಹೂತsದ ಹುಣಸಿ’ ಕವನದಲ್ಲಿ ಇಂತಹ ನೆಮ್ಮದಿಯ ಬದುಕಿನ ಒಂದು ಮುಖವನ್ನು ತೋರಿಸಿದ್ದಾರೆ.

‘ಹೂತsದ ಹುಣಸಿ’ ಕವನವು  ‘ಸಖೀಗೀತ’ ಸಂಕಲನದಲ್ಲಿ ಅಡಕವಾಗಿದೆ. ‘ಸಖೀಗೀತ’ವು ೧೯೩೭ರಲ್ಲಿ ಪ್ರಕಟವಾಯಿತು.  ಆ ಸಮಯದಲ್ಲಿ ಔದ್ಯೋಗಿಕ ನಾಗರಿಕತೆಯು ಭಾರತದಲ್ಲಿ ಇನ್ನೂ ಕಾಲಿಟ್ಟಿರಲಿಲ್ಲ. ವಿಶೇಷತಃ ಹಳ್ಳಿಯ ಜನರು ನಿರುಮ್ಮಳವಾದ ಬದುಕನ್ನು ನಡೆಯಿಸುತ್ತಿದ್ದರು. ಹಳ್ಳಿಯ ಹಾಡುಹಸೆಗಳು, ಪುರಾಣ ಪುಣ್ಯಕತೆಗಳು ಹಾಗು ಬಯಲಾಟದಂತಹ ಸಂಗತಿಗಳು ಅವರ ಮನರಂಜನೆಗೆ ಹಾಗು ಕಲಾಭಿವೃದ್ಧಿಗೆ ಪೂರಕವಾಗಿದ್ದವು. ಇಂತಹ ವಾತಾವರಣದಲ್ಲಿಬದುಕುತ್ತಿರುವ ಹಳ್ಳಿಗರ ದೈನಂದಿನ ಜೀವನವು ಪ್ರಕೃತಿಯೊಡನೆ ಸಮರಸವಾಗಿ ಸ್ಪಂದಿಸುತ್ತಿತ್ತು.

‘ಹೂತsದ ಹುಣಸಿ’ ಕವನವು ಇಂತಹ ಹಳ್ಳಿಯ ವ್ಯಕ್ತಿಯೊಬ್ಬನ ಚಿತ್ರವನ್ನು ಕೊಡುತ್ತದೆ. ಕಡುಬೇಸಿಗೆಯಲ್ಲಿ ತನ್ನ ಹೊಲದ ಕಡೆಗೆ ತೆರಳುತ್ತಿದ್ದ ಹಳ್ಳಿಗನೊಬ್ಬನು ಹೂವು ಬಿಟ್ಟಂತಹ ಹುಣಸಿಯ ಮರವನ್ನು ನೋಡಿದಾಗ, ಅದರಲ್ಲಿ ಚೆಲುವಿಕೆಯನ್ನು ಗುರುತಿಸುವ, ಆ ಚೆಲುವಿನಲ್ಲೇ ಪರವಶನಾಗುವ, ಹಾಗು ಹಗಲುಗನಸಿನಲ್ಲಿ ತೇಲಿ ಹೋಗುವ ಚಿತ್ರವನ್ನು ಈ ಕವನದಲ್ಲಿ ನೀಡಲಾಗಿದೆ.
-------------------------------------------------------
ಕವನದ ಪೂರ್ಣಪಾಠವು ಹೀಗಿದೆ:

ಹೂತsದ ಹುಣಸಿಯಾ ಚಿಗುರು
ಮದರಂಗಿ ಬಣ್ಣದುಗುರು
ರುಚಿಗೆ ಹುಳಿಯೊಗರು
ನೋಡ್ಯೆ ಜೀವಕ್ಕನಿಸಿತs ಹಗುರು ||ಹೂತsದ || ಪಲ್ಲ ||

ಉಗುರ್ಗೆಂಪು ಹಸಿರು ಬಿಳಿನಿಂಬಿ
ಹುಣಸಿಯಾ ರೆಂಬಿ
ಚಿಗತೀತೇನೊ ಎಂಬಿ
ಕಾಮsನ ಬಿಲ್ಲಿನಾ ಕೊಂಬಿ ||ಹೂತsದ

ಬ್ಯಾಸಿಗಿ ಹೊಡೆದsದ ಬಿಸಿಲಿನಾ ಡೇರೆ
ಮಧ್ಯಾಹ್ನದಾ ಪಾಹರೆ
ಯಾರಿಗಿಲ್ಲ ಹ್ವಾರೆ
ಸದ್ದು ಸುಳಿವು ಇಲ್ಲ ಬ್ಯಾರೆ ||ಹೂತsದ

ಸುಳ್ಳ ಸುಳ್ಳ ಗಾಳಿ ಹಾಕಿತ ಸಿಳ್ಳು
ಕಾಗಿ ಚುಂಚಿನ ಹಳ್ಳು
ಬಿದ್ದು ಆಂತ್ಯು “ಹೊಳ್ಳು”
ಮೈಚಾಚ್ಯsದ ಹುಣಸಿಯ ನೆಳ್ಳು ||ಹೂತsದ

ಅಡ್ಡಾಗತೇನಿ ನೆಳ್ಳಾಗ ಹೀಂಗ
ಹೂವು ಚಿಗುರು ಹ್ಯಾಂಗ
ಅವs ಹಾಸಿಧಾಂಗ
ಹುಳಿ ಚಿಗುರು ನುರಿಸಿ ನಾ ದಂಗ ||ಹೂತsದ

ಬಿಸಿಲ್ಗುದರಿ ಕುಣಿಯಲಿ ದೂರ
ಯಾರಿಗೆ ಬೇಕು ನೀರ
ಹೀಂಗ ನನ್ನಿದಿರ
ಕಣ್ಣಳತಿಯೊಳಗ ನೀ ಬಾರ ||ಹೂತsದ

ಹಾರತಿರಲಿ ಗಾಳಿಗೆ ಬಿಚ್ಚಿದ್ಹೆರಳು
ವಾರಿಯಿರಲಿ ಕೊರಳು
ಬಾಚತಿರಲಿ ಬೆರಳು
ನೋಡ್ತೇನಿ ನಿನ್ನ ಕವಿನೆರಳು ||ಹೂತsದ

ಕಣಕಣ್ಣ ಚಕಮಕಿ ಇತ್ತ
ಕುಡಿಗಣ್ಣಿನತ್ತ
ತಾಕಿ ಹಾರಿತ್ತ
ಗಾಳಿಸವಾರಿಗ್ಹೊರಟಿತ್ತ ಚಿತ್ತ ||ಹೂತsದ

ಅಗೊ ಗಾಳಿ ಧೂಳಿಯಾ ಬಂಬಾ
ನಿಂತ್ಹಾಂಗ ಅದ ಖಂಬಾ
ಅಲ್ಲಿ ರೌದಿ ತುಂಬಾ
ಗಣಿ ಕುಣಿಧಾಂಗ ಡೊಂಬರ ರಂಭಾ ||ಹೂತsದ

ಮ್ಯಾಲೆ ಅಲ್ಲಿ ಪಾರಿವಾಳ ಜೋಡಿ
ಒಂದಕ್ಕೊಂದ ನೋಡಿ
ಬಿಸಿಲ ತೆರೆ ದೂಡಿ
ಹಾರ್ತsದ ನೀಲಿಮುಗಿಲ್ಕೂಡಿ  ||ಹೂತsದ

೧೦
ಕಂಡಂಗಾತು ನೀರಿನ ಕೊಳ
ನೀಲಿ ಮುಗಿಲ ಜಳಾ
ಎಂಥ ಝಳ ಝಳಾ
ಮುಳುಮುಳುಗಿ ಹೋತು ಮನದ ಧೂಳಾ ||ಹೂತsದ

೧೧
ಕಾಲ ಹೋಗತಿತ್ತ ಹಿಂದ ಸರಿದು
ಮನಸು ಆತ ಬರಿದು
ಮಧ್ಯಾನ ಬ್ಯಾಸರ ಮುರಿದು
ಬಿಸಿಲ ತಾನs ಹೋಗತಿತ್ತ ಹರಿದು ||ಹೂತsದ

೧೨
ಕವಿ ಜೀವದ ಬ್ಯಾಸರ ಹರಿಸಾಕ
ಹಾಡ ನುಡಿಸಾಕ
ಹೆಚ್ಚಿಗೇನು ಬೇಕ?
ಒಂದು ಹೂತ ಹುಣಸಿಮರ ಸಾಕ ||ಹೂತsದ
------------------------------------------------------------

ಹುಣಸಿ ಮರವು ಚಿಗುರುವ ಕಾಲದಲ್ಲಿ ಅಂದರೆ ಬಹುಶಃ ವೈಶಾಖ ಮಾಸದಲ್ಲಿ ಈ ಹಳ್ಳಿಗನು ತನ್ನ ಹೊಲಕ್ಕೆ ಹೊರಟಿದ್ದಾನೆ. ಈ ಕಾಲದಲ್ಲಿ ಹೊಲದಲ್ಲಿ ಕೃಷಿ ಕೆಲಸವೇನೂ ಇರುವದಿಲ್ಲ. ಬಹಳವಾದರೆ ಸಣ್ಣ ಪುಟ್ಟ ದುರಸ್ತಿ ಕೆಲಸಗಳು, ನಟ್ಟು ಕಡಿಯುವದು, ಕಳೆ ಕೀಳುವದು ನಡೆಯುತ್ತಿರುತ್ತವೆ. ನಮ್ಮ ನಾಯಕನು ಹೀಗೇ ತನ್ನ ಹೊಲದ ಕಡೆಗೆ ನಡೆದಾಗ ಹೊಲದ ಒಂದು ಭಾಗದಲ್ಲಿ ಇರಬಹುದಾದ ಹುಣಸಿಯ ಮರವು ಇವನ ಕಣ್ಣಿಗೆ ಬೀಳುತ್ತದೆ. ಖಾಲಿಯಾದ ಹೊಲದಂತೆಯೇ ಖಾಲಿಯಾದ ಇವನ ಮನಸ್ಸು ಈಗಷ್ಟೇ ಹೂವು ಬಿಡುತ್ತಿರುವ ಹುಣಸಿಯ ಮರವನ್ನು ಕಂಡು ಬೆರಗಾಗುತ್ತದೆ. ಆಗ ಇವನ ಮನಸ್ಸಿನಲ್ಲಿ ಉಕ್ಕುವ ಭಾವ ಹೀಗಿದೆ:

ಹೂತsದ ಹುಣಸಿಯಾ ಚಿಗುರು
ಮದರಂಗಿ ಬಣ್ಣದುಗುರು
ರುಚಿಗೆ ಹುಳಿಯೊಗರು
ನೋಡ್ಯೆ ಜೀವಕ್ಕನಿಸಿತs ಹಗುರು ||ಹೂತsದ

ಭಾರತದ ಆದಿಕವಿ ವಾಲ್ಮೀಕಿಗೆ ಕಾವ್ಯಸ್ಫುರಣವಾಗಲು ಕ್ರೌಂಚವಧೆಯು ಕಾರಣವಾಯಿತು. ಬೇಂದ್ರೆಯವರ ಕವನದ ನಾಯಕನಾದರೊ ಒಬ್ಬ ಅತಿ ಸಾಮಾನ್ಯ ಗ್ರಾಮೀಣ ವ್ಯಕ್ತಿ. ಈತನು ನಗರಜೀವಿ ಅಲ್ಲದ್ದರಿಂದಲೇ ಇವನ ಪ್ರಕೃತಿ-ಸಂವೇದನೆ ಇನ್ನೂ ಸುಸ್ಥಿತಿಯಲ್ಲಿದೆ ! ಆದುದರಿಂದ ಈಗತಾನೆ ಹೂವು ಬಿಡುತ್ತಿರುವ ಹುಣಸಿಯ ಮರವನ್ನು ಕಂಡಾಗ ಇವನಿಗೆ ಸುಖವೆನಿಸುತ್ತದೆ. ಈ ಸಂಗತಿಯೇ ಇವನ ಭಾವಸ್ಫುರಣಕ್ಕೆ ಕಾರಣವಾಗುತ್ತದೆ. 

ಹುಣಸಿಯ ಚಿಗುರು ನಮ್ಮ ನಾಯಕನಿಗೆ ಮದರಂಗಿ ಬಣ್ಣ ಹಚ್ಚಿದ ಉಗುರಿನಂತೆ ಕಾಣುವದಂತೆ. ಇದರ ಕಾರಣವೇನು?  ಮನುಷ್ಯರ ಅಗ್ರಭಾಗದಲ್ಲಿ ಉಗುರುಗಳು ಇದ್ದಂತೆ, ಮರಗಳ ಅಗ್ರಭಾಗದಲ್ಲಿ ಚಿಗುರುಗಳು ಇರುತ್ತವೆ. ಆದುದರಿಂದ ಹಸಿರು ಎಲೆಗಳಿಂದ ತುಂಬಿದ ಹುಣಸಿಯ ಮರದಲ್ಲಿ ಮೂಡುತ್ತಿರುವಂತಹ  ಕೆಂಪು ಚಿಗುರುಗಳು ಇವನ ಕಣ್ಣಿಗೆ ಮೊದಲು ಬೀಳುತ್ತವೆ. ಇವುಗಳನ್ನು ಕಂಡಾಗಲೇ ಅವನಿಗೆ ಹುಣಸಿಯ ಮರವು ಹೂವು ಬಿಡುತ್ತಿರುವ ಅರಿವು ಆಗುತ್ತದೆ.

ಹಳ್ಳಿಯ ವ್ಯಕ್ತಿಯಾದ ಈತನಿಗೆ ಈ ಕೆಂಪು ಬಣ್ಣವು ಹಳ್ಳಿಯ ಹೆಣ್ಣುಗಳು ತಮ್ಮ ಉಗುರುಗಳಿಗೆ ಹಚ್ಚಿಕೊಂಡಂತಹ ಮದರಂಗಿಯ ಕೆಂಪು ಬಣ್ಣವನ್ನು ಸ್ಮರಣೆಯಲ್ಲಿ ತರುತ್ತವೆ. ಅಂದರೆ ಈತ ಬದುಕನ್ನು ತೆರೆದ ಕಣ್ಣುಗಳಿಂದ ನೋಡಬಲ್ಲ ಹಾಗು ಅನುಭವಿಸಬಲ್ಲ ರಸಿಕ ಮನುಷ್ಯ ಎನ್ನುವದು ಸ್ಪಷ್ಟವಾಗುತ್ತದೆ.
(ಬೇಂದ್ರೆಯವರು ಉಪಮೆಗಳನ್ನು ಬಳಸುವಾಗಲೂ ಸಹ, ವಾಸ್ತವತೆಯನ್ನು ಲಕ್ಷದಲ್ಲಿಟ್ಟಿರುತ್ತಿದ್ದರು ಹಾಗು ಆ ಉಪಮೆಯ ಅನೇಕ ಪ್ರಯೋಜನಗಳನ್ನು ಪಡೆಯುವ ಪ್ರತಿಭೆ ಉಳ್ಳವರು ಎನ್ನುವದು ಇದರಿಂದ ವೇದ್ಯವಾಗುತ್ತದೆ!)

ಇಂತಹ ರಸಿಕ ಮನುಷ್ಯ ಆ ಚಿಗುರನ್ನು ನೋಡಿ ಸುಮ್ಮನೆ ಹೋಗುತ್ತಾನೆಯೆ? ಮುಂದಿನ ಕ್ರಮವೆಂದರೆ, ಆ ಚಿಗುರು ಇವನ ಬಾಯಿಗೆ ಇಳಿಯುತ್ತದೆ ! ಆ ಚಿಗುರಿನ ರುಚಿಯನ್ನು ಈತ ಹುಳಿ ಹಾಗು ಒಗರು ಎಂದು ಅನುಭವಿಸುತ್ತಾನೆ. ಆದರೆ ಇಂತಹ ಕಡುರುಚಿಯಿಂದ ಅವನ ಸುಖ ಹೆಚ್ಚುತ್ತದೆಯೇ ಹೊರತು ಕಡಿಮೆಯಾಗುವದಿಲ್ಲ. ಯಾಕೆಂದರೆ ಪ್ರಕೃತಿಧರ್ಮವನ್ನು ಅನುಸರಿಸುತ್ತಿರುವ ಹುಣಸಿಯ ಮರದ ಚಿಗುರು ಇರಬೇಕಾದದ್ದೇ ಹೀಗೆ! ಅದು ಹೀಗಿದ್ದರೇನೆ ಆತನಿಗೆ ಸಮಾಧಾನ ಸಿಗುವದು. ಆದುದರಿಂದಲೇ ಆತ ಹೇಳುವದು: ‘ನೋಡ್ಯೆ ಜೀವಕ್ಕನಿಸಿತs ಹಗುರು’. 
ಋತುಧರ್ಮವು ಸರಿಯಾಗಿ ಕ್ರಮಿಸುತ್ತಿದ್ದರೆ ಮಾತ್ರ ಹಳ್ಳಿಗನ ಮನಸ್ಸಿಗೆ ನೆಮ್ಮದಿಯಿರುತ್ತದೆ.

ಹುಣಸಿಯ ಚಿಗುರನ್ನು ನೋಡಿದ ಬಳಿಕ ಹಾಗು ಮೆಲ್ಲಿದ ಬಳಿಕ ಈತನ ನೋಟವು ಸಹಜವಾಗಿ, ಮುಂದಿನ ಮಜಲಿಗೆ ಅಂದರೆ ಹುಣಸಿಮರದ ರೆಂಬೆಗಳ ಕಡೆಗೆ ಹರಿಯುತ್ತದೆ. ಆ ರೆಂಬೆಗಳು ಈತನಿಗೆ ಕಾಣುವ ಪರಿ ಹೀಗಿದೆ:

ಉಗುರ್ಗೆಂಪು ಹಸಿರು ಬಿಳಿನಿಂಬಿ
ಹುಣಸಿಯಾ ರೆಂಬಿ
ಚಿಗತೀತೇನೊ ಎಂಬಿ
ಕಾಮsನ ಬಿಲ್ಲಿನಾ ಕೊಂಬಿ ||ಹೂತsದ

ಹುಣಸಿ ಮರದ ರೆಂಬೆಯ ಬಣ್ಣಗಳನ್ನು ಈತ ಎಷ್ಟು ಸೂಕ್ಷ್ಮ ವಿವರಗಳೊಡನೆ ಲಕ್ಷಿಸುತ್ತಾನೆ ಎನ್ನುವದನ್ನು ನೋಡಿರಿ. ಈ ರೆಂಬೆಗೆ ಉಗುರಿನ ಕೆಂಪಿದೆ ಹಾಗು ಇನ್ನೂ ಹಣ್ಣಾಗದಿರುವ ಬಿಳಿ-ಹಸಿರು ನಿಂಬಿಯ ಬಣ್ಣವಿದೆ. ಕಾಮನ ಬಿಲ್ಲಿನ ತುದಿಯು ಚಿಗಿತಂತೆ ಇವನಿಗೆ ಅದು ಭಾಸವಾಗುತ್ತದೆ. (ಈ ಬಿಲ್ಲು ಬಾನಿನಲ್ಲಿ ಮೂಡುವ ಕಾಮನ ಬಿಲ್ಲೂ ಹೌದು ; ಕಾಮದೇವನ ಬಿಲ್ಲೂ ಹೌದು !) ಕೆಂಪು, ಹಳದಿ ಹಾಗು ನೀಲಿ ಬಣ್ಣಗಳಿಂದ ಕೂಡಿದ ಕಾಮನ ಬಿಲ್ಲಿನ ವರ್ಣವ್ಯವಸ್ಥೆಯು ಈತನಿಗೆ ಹುಣಸಿಮರದ ರೆಂಬೆಯಲ್ಲಿ ಕಂಡರೆ ಆಶ್ಚರ್ಯವಿಲ್ಲ.
ಇಲ್ಲಿ ಅಡಗಿರುವ ಮತ್ತೊಂದು ಸೂಚನೆ ಎಂದರೆ, ಕಾಮದೇವನ ಬಿಲ್ಲು ಸೃಷ್ಟಿ ಸಂಕೇತವಾಗಿರುವದು. ಚಿಗುರಿನ ನಂತರ ಬರುವದು ಹೂವು, ಹೂವಿನ ನಂತರ ಬರುವದು ಹಣ್ಣು. ಇದು ಕಾಮದೇವನ ಸೃಷ್ಟಿಕ್ರಮ.

ಹುಣಸಿಯ ಮರವು ಹೂವು ಬಿಟ್ಟು ಚೆಲುವಾಗಿದ್ದನ್ನು ಗ್ರಹಿಸಿದ ಇವನ ನೇತ್ರೇಂದ್ರಿಯಕ್ಕೆ ಖುಶಿಯಾಯಿತು. ಚಿಗುರನ್ನು ತಿಂದ ಇವನ ಜಿಹ್ವೇಂದ್ರಿಯಕ್ಕೆ ಖುಶಿಯಾಯಿತು. ಹುಣಸಿಯ ಚೆಲುವಿನಲ್ಲಿ ಪರವಶನಾಗಿದ್ದ ಈತನೀಗ ಬಹಿರ್ಮುಖನಾಗುತ್ತಾನೆ ಹಾಗೂ ಇವನ ಸ್ಪರ್ಶೇಂದ್ರಿಯಕ್ಕೆ ತನ್ನ ಸುತ್ತಲಿನ ಪ್ರಕೃತಿಯ ವಾಸ್ತವ ಮುಖದ ಅಂದರೆ ಬಿಸಿಲಿನ ಅನುಭವವಾಗುತ್ತದೆ :

ಬ್ಯಾಸಿಗಿ ಹೊಡೆದsದ ಬಿಸಿಲಿನಾ ಡೇರೆ
ಮಧ್ಯಾಹ್ನದಾ ಪಾಹರೆ
ಯಾರಿಗಿಲ್ಲ ಹ್ವಾರೆ
ಸದ್ದು ಸುಳಿವು ಇಲ್ಲ ಬ್ಯಾರೆ ||ಹೂತsದ

ವೈಶಾಖ ಮಾಸವೆಂದರೆ ಬಿರುಬೇಸಿಗೆಯ ಕಾಲ. (‘ಬೇಸಿಗೆ’ ಇದು ‘ವೈಶಾಖ’ದ ತದ್ಭವ ಎನ್ನುವದನ್ನು ಗಮನಿಸಬೇಕು.)  ಇದೇನು ಕಡೆತನಕ ಇರುವಂತಹ ಋತು ಅಲ್ಲ. ಎಲ್ಲ ಅಲೆಮಾರಿಗಳಂತೆ ಬೇಸಿಗೆಯೂ ಸಹ ಈತನ ಊರಿನಲ್ಲಿಇದೀಗ ಡೇರೆ ಹೊಡೆದುಕೊಂಡು ಕೂತಿದೆ.

ಗಮನಿಸತಕ್ಕ ಅಂಶವೆಂದರೆ ಡೇರೆಯನ್ನು ಹೊಡೆಯುವದು ಸಮತಟ್ಟಾದ ಬಯಲಿನಲ್ಲಿ. ಅಂದರೆ ಈ ವ್ಯಕ್ತಿಯ ಊರು ಬಯಲಸೀಮೆಯಲ್ಲಿರುವ ಹಳ್ಳಿ. ಅಲ್ಲೊ ಇಲ್ಲೊ ಇರುವ ಬೇವಿನ ಅಥವಾ ಹುಣಸಿಯ ಗಿಡಗಳನ್ನು ಮಾತ್ರ ಇಲ್ಲಿ ಕಾಣಬಹುದು.

ಡೇರೆಯನ್ನು ಹೊಡೆದಿರುವವರು ಇಂದಿಲ್ಲ ನಾಳೆ ಕಿತ್ತುಕೊಂಡು ಹೋಗುತ್ತಾರೆ. ಬೇಸಿಗೆಯೂ ಹೋಗುವಂತಹದೇ. ಈ ವ್ಯಕ್ತಿಯೂ ಆ ಕಾಲಕ್ಕಾಗಿ ಕಾಯುತ್ತಿದ್ದಾನೆ. ಆದರೆ ಬಿಸಿಲು ಮಾತ್ರ ಸದ್ಯದ ಗಳಿಗೆಯಲ್ಲಿ ತನ್ನ ಡೇರೆಯ ಹೊರಗೆ ಮಧ್ಯಾಹ್ನದ ಪಾಳಿಯ ಕಾವಲುಗಾರನಂತೆ ಪಹರೆ ಮಾಡುತ್ತಿದೆ !  ಬೇಸಿಗೆಯ ಬಿಸಿಲಿಗಾದರೊ ಪಹರೆ ಕಾಯುವ ಕೆಲಸವಿದೆ. ಆದರೆ ಈ ಸುಡುಬೇಸಿಗೆಯಲ್ಲಿ ಹಳ್ಳಿಯ ಜನರಿಗೇನು ಕೆಲಸ ? ಬಹುತೇಕ ಜನರು ಎಳೆಬಿಸಿಲಿನಲ್ಲಿಯೇ ಸಣ್ಣ ಪುಟ್ಟ ದುರಸ್ತಿ ಕೆಲಸಗಳನ್ನು ಮುಗಿಸಿಕೊಂಡು ಮನೆಗೆ ಹೋಗಿ ಬಿಟ್ಟಿರುತ್ತಾರೆ. ಯಾರಿಗೂ ಈಗ ಹ್ವಾರೆ(=ಕೆಲಸ) ಇಲ್ಲ. ಆದುದರಿಂದಲೇ ಇಲ್ಲಿ ಯಾವುದೇ ಸದ್ದಿಲ್ಲ ; ಯಾತರದೂ ಸುಳಿವೂ ಇಲ್ಲ.

ಸುಳ್ಳ ಸುಳ್ಳ ಗಾಳಿ ಹಾಕಿತ ಸಿಳ್ಳು
ಕಾಗಿ ಚುಂಚಿನ ಹಳ್ಳು
ಬಿದ್ದು ಆಂತ್ಯು “ಹೊಳ್ಳು”
ಮೈಚಾಚ್ಯsದ ಹುಣಸಿಯ ನೆಳ್ಳು ||ಹೂತsದ

ಪಂಚೇಂದ್ರಿಯಗಳಲ್ಲಿ ನಾಲ್ಕಾದ ನೇತ್ರ,ಜಿಹ್ವೆ, ಘ್ರಾಣ ಹಾಗು ಸ್ಪರ್ಶದ ನಂತರ ಇದೀಗ ಐದನೆಯದಾದ ಕರ್ಣೇಂದ್ರಿಯದ ಸರದಿ. ಇಲ್ಲಿಯ ವರೆಗೆ ಸ್ತಬ್ಧವಾಗಿದ್ದ ವಾತಾವರಣದಲ್ಲಿ ಇದೀಗ ಗಾಳಿಯಿಂದ ಚಲನೆ ಮೂಡುತ್ತದೆ. ಎಲ್ಲರೂ ಊಟ ಮುಗಿಸಿಕೊಂಡು ಮಲಗಿರುವಾಗ, ಈ ಗಾಳಿ ಮಾತ್ರ ಹರಿದಾಡುತ್ತ ಸಿಳ್ಳು ಹಾಕುತ್ತಿದೆ. ಹುಣಸಿಮರದ ಎಲೆಗಳಲ್ಲಿ ಹಾಯ್ದು ಹೋಗುವಾಗ ಅದರಿಂದ ಉಂಟಾಗುವ ಧ್ವನಿ ಸಿಳ್ಳಿನಂತೆ ಕೇಳಿಸುತ್ತದೆ. ಇದು ಕೆಲಸವಿಲ್ಲದ ಉಂಡಾಡಿ ತರುಣನ ನಿಶ್ಚಿಂತ, ವಿನಾಕಾರಣ ಸಿಳ್ಳು ; ಯಾಕೆಂದರೆ ಸಿಳ್ಳು ಹಾಕುವಂತಹ ಯಾವ ಕಾರಣವೂ ಗಾಳಿಗಿಲ್ಲ. ಆದುದರಿಂದ ಬೇಂದ್ರೆ ಇದನ್ನು ‘ಸುಳ್ಳ ಸುಳ್ಳ ಸಿಳ್ಳು’ ಎಂದು ಬಣ್ಣಿಸುತ್ತಾರೆ.  

ಈ ಸಿಳ್ಳಿನ ಪರಿಣಾಮವಾಗಿ ಮರದ ಟೊಂಗೆಯ ಮೇಲೆ ಕುಳಿತ ಕಾಗೆಯೊಂದು ಬೆಚ್ಚಿ ಬೀಳುತ್ತದೆ. ಅದು ಚುಂಚಿನಲ್ಲಿ ಹಿಡಿದುಕೊಂಡಂತಹ ಸಣ್ಣ ಹಳ್ಳೊಂದು ದೊಪ್ಪನೆ ಕೆಳಗೆ ಬೀಳುತ್ತದೆ. ಬಿದ್ದ ಹಳ್ಳು (=ಕಲ್ಲಿನ ಸಣ್ಣ ತುಣುಕು) ನೆಟ್ಟಗೆ ನಿಲ್ಲಲಾರದೆ ಹೊರಳುತ್ತದೆ. ಇಂತಹ ಸಣ್ಣ ಘಟನೆಯೂ ಸಹ ನಮ್ಮ ನಾಯಕನ ಅರಿವಿನಲ್ಲಿ ಮೂಡುತ್ತದೆ. ಇಂತಹದೇ ಮತ್ತೊಂದು ವಿಷಯವನ್ನೂ ಅವನು ಗಮನಿಸುತ್ತಾನೆ. ಅದೇನೆಂದರೆ, ಹುಣಸಿ ಮರದ ನೆರಳೂ ಸಹ ಮೈ ಚಾಚಿ ಮಲಗಿಕೊಂಡಿದೆ! (ಬೇಂದ್ರೆಯವರು ಅಪರಾಹ್ನದ ಕಾಲವನ್ನು ಸೂಚಿಸುತ್ತಿದ್ದಾರೆ.) ಇದೆಲ್ಲದರ ಅರ್ಥವೆಂದರೆ, ಸಚರಾಚರ ಜಗತ್ತೆಲ್ಲ, ಬಿಸಿಲಿನ ಧಗೆಯನ್ನು ಪರಿಹರಿಸಿಕೊಳ್ಳಲು ಒರಗಿಕೊಂಡಿದೆ. ಇನ್ನು ನಾಯಕನಿಗೇನು ಕೆಲಸ? ಅವನೂ ಸ್ವಗತವೆಂಬಂತೆ ನುಡಿಯುತ್ತಾನೆ:

ಅಡ್ಡಾಗತೇನಿ ನೆಳ್ಳಾಗ ಹೀಂಗ
ಹೂವು ಚಿಗುರು ಹ್ಯಾಂಗ
ಅವs ಹಾಸಿಧಾಂಗ
ಹುಳಿ ಚಿಗುರು ನುರಿಸಿ ನಾ ದಂಗ ||ಹೂತsದ

ಇದೇ ಹುಣಸಿಯ ಮರದ ನೆರಳಿನ ಕೆಳಗೆ ತಾನೂ ಅಡ್ಡಾಗಬೇಕೆನ್ನುವ ಯೋಚನೆ ಅವನಲ್ಲಿ ಬರುತ್ತದೆ. ಮರದ ಕೆಳಗೆ ಒರಗಿದಾಗ, ಅವನಿಗೆ ಮೇಲೆ ಕಾಣುವದೇನು? ಮರದ ತುಂಬೆಲ್ಲ ಹರಡಿದ ಹೂವು ಹಾಗು ಚಿಗುರು ತನ್ನ ಮೇಲೆಯೇ ಹಾಸಿದಂತೆ ಅವನಿಗೆ ಕಾಣುತ್ತದೆ. ಅಲ್ಲಿ ಒರಗಿದಂತೆಯೇ, ಹುಳಿ ಹುಳಿ ಚಿಗುರನ್ನು ನುರಿಸುತ್ತ, ಆ ಕಡುರುಚಿಗೆ ಆತ ಮರುಳಾಗುತ್ತಾನೆ.

ಈಗ ಅವನ ದೃಷ್ಟಿ ಕೆಳಗೆ ಸರಿಯುತ್ತ ಬಯಲಿನ ಕಡೆಗೆ ಹೋಗುತ್ತದೆ. ಕಣ್ಣ ನೋಟವೇ ಮಿತಿಯಾಗಿರುವಂತಹ ವಿಶಾಲವಾದ ಈ ಬಯಲು ಪ್ರದೇಶದಲ್ಲಿ, ಈ ಬಿಸಿಲಿನ ಝಳಕ್ಕೆ ದೂರದಲ್ಲಿ ಮೃಗಜಲದ ಆಭಾಸವಾಗುವದು ಸಹಜ. ನಮ್ಮ ಕವನದ ನಾಯಕನ ಕಣ್ಣಿಗೂ ಇದು ಬೀಳುತ್ತದೆ. ಆದರೆ ಆರಾಮಾಗಿ ಮಲಗಿಕೊಂಡಿರುವ ನಮ್ಮ ನಾಯಕನು ಈ ಮೃಗಜಲಕ್ಕೆ ಗಮನ ಹರಿಸುವದಿಲ್ಲ. ಭ್ರಮೆಯಲ್ಲಿ ಕಾಣಿಸುವ ನೀರು ಆತನಿಗೆ ಬೇಕಾಗಿಲ್ಲ. ಆತನಿಗೆ ಬೇಕಾದದ್ದು ಪ್ರೀತಿಯ ನೀರು. ಬಿಸಿಲುಕುದುರಿ ಬೇಕಾದಷ್ಟು ಕುಣಿಯಲಿ, ಅದಕ್ಕೆ ಅವನು ಲಕ್ಷ್ಯ ಕೊಡಲಾರ. ಅವನನ್ನು  ತಣಿಸುವಂತಹದು ಅವನ ಕೆಳದಿಯ ಒಲವಿನ ಒಡನಾಟ ಮಾತ್ರ. ಆದರೆ ನಮ್ಮ ರಸಿಕ ನಾಯಕನ ಕೆಳದಿ ಇಲ್ಲಿಲ್ಲ. ಹೊಲದಲ್ಲಿ ಏನೂ ಕೆಲಸವಿಲ್ಲದಾಗ, ತನ್ನ ಗಂಡನಿಗೆ ಬುತ್ತಿಯನ್ನು ಕಟ್ಟಿಕೊಂಡು ಬರುವ ಪ್ರಸಂಗವು ಹೆಂಡತಿಗೆ ಬರುವದಿಲ್ಲ.ಅದಕ್ಕಾಗಿ ಆಕೆಯನ್ನು ಆತ ಕರೆಯುವದು ಹೀಗೆ :

ಬಿಸಿಲ್ಗುದರಿ ಕುಣಿಯಲಿ ದೂರ
ಯಾರಿಗೆ ಬೇಕು ನೀರ
ಹೀಂಗ ನನ್ನಿದಿರ
ಕಣ್ಣಳತಿಯೊಳಗ ನೀ ಬಾರ ||ಹೂತsದ

ನಾಯಕ ತನ್ನ ಕೆಳದಿಯನ್ನು  ‘ಕಣ್ಣಳತಿಯೊಳಗೆ ಬಾ’ ಎಂದು ಕರೆಯುತ್ತಾನೆಯೇ ಹೊರತು, ಮೈಗೆ ಮೈ ಹಚ್ಚಿ ಕೂಡುವಷ್ಟು ಹತ್ತಿರ ಕರೆಯುತ್ತಿಲ್ಲ. ಯಾಕೆಂದರೆ ಈ ರಸಿಕನಿಗೆ ಅವಳ ಚೆಲುವನ್ನು ಅಲ್ಪದೂರದಿಂದಲೇ ಕಂಡು ಸುಖಿಸಬೇಕಾಗಿದೆ. ಅದು ಯಾವ ರೀತಿಯ ಚೆಲುವು ಎನ್ನುವದು ಈ ನುಡಿಯಲ್ಲಿ ವ್ಯಕ್ತವಾಗಿದೆ :

ಹಾರತಿರಲಿ ಗಾಳಿಗೆ ಬಿಚ್ಚಿದ್ಹೆರಳು
ವಾರಿಯಿರಲಿ ಕೊರಳು
ಬಾಚತಿರಲಿ ಬೆರಳು
ನೋಡ್ತೇನಿ ನಿನ್ನ ಕವಿನೆರಳು ||ಹೂತsದ

ಬಿಸಿಲಿನಿಂದಾಗಿ ಏಳುತ್ತಿರುವ  ಬಯಲಸೀಮೆಯ ಗಾಳಿಗೆ ಅವಳ ಬಿಚ್ಚಿದ ಹೆರಳು ಹಾರಾಡುತ್ತಿರುವದನ್ನು ಈತ ಕಲ್ಪಿಸಿಕೊಳ್ಳುತ್ತಾನೆ. ಆ ಹಾರುತ್ತಿರುವ ಕೂದಲನ್ನು ಸರಿಪಡಿಸಿಕೊಳ್ಳಲು ಅವಳು ಕೊರಳನ್ನು ಕೊಂಕಿಸಿ, ತನ್ನ ಬೆರಳುಗಳಿಂದ ಬಾಚಿಕೊಳ್ಳುವದನ್ನು ಆತ ಮನದಲ್ಲಿಯೇ ಚಿತ್ರಿಸಿಕೊಳ್ಳುತ್ತಾನೆ. ಅವಳಿಗಿಂತ ಮೊದಲೇ ಅವಳ ನೆರಳು ಇವನ ಹತ್ತಿರಕ್ಕೆ ಬರುವದರಿಂದ, ಅವಳ ಕವಿಯುತ್ತಿರುವ ನೆರಳಿನಿಂದಲೇ ಅವಳು ತನ್ನ ಸನಿಹಕ್ಕೆ ಬಂದದ್ದನ್ನು ಈತ ಊಹಿಸಿಕೊಳ್ಳುತ್ತಾನೆ. ಎಂತಹ ಕಲ್ಪನಾಚತುರನಾಗಿದ್ದಾನೆ ನಮ್ಮ ರಸಿಕ ನಾಯಕ! ಅವನ ಮುಂದಿನ ಕಲ್ಪನೆಯು ಇನ್ನಿಷ್ಟು ಪ್ರಣಯಮಧುರವಾಗಿದೆ.

ಕಣಕಣ್ಣ ಚಕಮಕಿ ಇತ್ತ
ಕುಡಿಗಣ್ಣಿನತ್ತ
ತಾಕಿ ಹಾರಿತ್ತ
ಗಾಳಿಸವಾರಿಗ್ಹೊರಟಿತ್ತ ಚಿತ್ತ ||ಹೂತsದ

ಈ ರಸಿಕ ನಾಯಕನ ರಸಿಕ ಕೆಳದಿಯು ತನ್ನ ನಲ್ಲನನ್ನು ಸಮೀಪಿಸುವದಿಲ್ಲ , ನೇರವಾಗಿ ನೋಡುವದಿಲ್ಲ. ಕೇವಲ ಕುಡಿಗಣ್ಣಿನ ನೋಟವನ್ನು ಬೀರುತ್ತಾಳೆ, ಮತ್ತೆ ನೋಟವನ್ನು ಹೊರಳಿಸುತ್ತಾಳೆ, ಮತ್ತೆ ಅವನೊಡನೆ ಕಣ್ಣುಗಳನ್ನು ಕೂಡಿಸುತ್ತಾಳೆ. ಅವನೂ ಅಷ್ಟೇ! ಬೇಂದ್ರೆಯವರು ಇದನ್ನು ‘ಕಣಕಣ್ಣ ಚಕಮಕಿ’ ಎಂದು ಬಣ್ಣಿಸುತ್ತಾರೆ. ಬೆಣಚುಕಲ್ಲುಗಳ  ಚಕಮಕಿಯಲ್ಲಿ ಕಿಡಿ ಹಾರುವಂತೆ ಈ ಕಣ್ಣುಗಳ ಚಕಮಕಿಯಲ್ಲಿಯೂ ಸಹ ‘ತಾಕಿ ಹಾರಿತ್ತ’. ಆದರೆ ಇಲ್ಲಿ ಹಾರಿದ್ದು ತುಂಟ ಪ್ರಣಯದ ಕಿಡಿ!

ಈ ರೀತಿಯಲ್ಲಿ ನಮ್ಮ ನಾಯಕನ ಚಿತ್ತವು ಗಾಳಿಸವಾರಿಯನ್ನು ಮಾಡುತ್ತಿದೆ. ಅಂದರೆ ಗಾಳಿ ಹೇಗೆ ಎತ್ತೆತ್ತಲೊ ಬೀಸುವದೋ, ಅದೇ ತೆರದಲ್ಲಿ ಈತನ ಚಿತ್ತವೂ ಸಹ ಹಗಲುಗನಸಿನಲ್ಲಿ ಎತ್ತೆತ್ತಲೊ ಹರಿಯುತ್ತಿದೆ.
ಕವನದ ನಾಯಕನು ಈಗ ಹಗಲುಗನಸಿನಿಂದ ಹೊರಬಂದು  ವಾಸ್ತವ ಜಗತ್ತನ್ನು ನೋಡುತ್ತಾನೆ. ಆತನ ದೃಷ್ಟಿಯು ಸಮೀಪದಿಂದ ಸ್ವಲ್ಪ ದೂರದೆಡೆಗೆ ಸಾಗುತ್ತದೆ. ಅಲ್ಲಿ ಅವನಿಗೆ ಕಾಣುವದೇನು?

ಅಗೊ ಗಾಳಿ ಧೂಳಿಯಾ ಬಂಬಾ
ನಿಂತ್ಹಾಂಗ ಅದ ಖಂಬಾ
ಅಲ್ಲಿ ರೌದಿ ತುಂಬಾ
ಗಣಿ ಕುಣಿಧಾಂಗ ಡೊಂಬರ ರಂಭಾ ||ಹೂತsದ

ಸುಂಟರಗಾಳಿಯು ಸೃಷ್ಟಿಸಿದ ಧೂಳಿಯ ಬಂಬು (=bumb, ಪೊಳ್ಳಾಗಿರುವ ಸಿಲಿಂಡರಾಕಾರದ ರಚನೆ) ನಾಯಕನ ಕಣ್ಣಿಗೆ ಗಾಳಿಯ ಕಂಬವೊಂದು ನಿಂತುಕೊಂಡಂತೆ ಕಾಣುತ್ತದೆ. ಅದರ ಒಳಗೆಲ್ಲ ರವದಿಯಂತಹ (=ದಂಟಿನ ಸಿಪ್ಪೆ , ಕಸದಂತಹ) ಕ್ಷುಲ್ಲಕ ವಸ್ತು ತುಂಬಿಕೊಂಡಿದೆ. ಆದರೆ ಇಂತಹ ಸಾಮಾನ್ಯ ನೋಟವೂ ಸಹ ನಮ್ಮ ರಸಿಕ ನಾಯಕನಲ್ಲಿ ಕೌತುಕವನ್ನು ಹುಟ್ಟಿಸಬಲ್ಲದು. ಈ ಗಾಳಿಗಂಬದ ತಿರುಗುವಿಕೆಯು ಇವನ ಕಣ್ಣಿಗೆ ‘ಡೊಂಬರ ರಂಭೆ’ ಕುಣಿದಂತೆ ಕಾಣುವದು. ಹಳ್ಳಿಯಲ್ಲಿ ಕಸರತ್ತು ಮಾಡಿ ಮನರಂಜನೆ ನೀಡುವ ಕೆಲಸವನ್ನು ಡೊಂಬರು ಮಾಡುತ್ತಿದ್ದರು. ಆ ಕಸರತ್ತಿನಲ್ಲಿ ಕುಣಿಯುವ ಹುಡುಗಿ, ಈ ಹಳ್ಳಿಗರ ಪಾಲಿಗೆ ರಂಭೆ! ಈ ರೀತಿಯಾಗಿ ಗಾಳಿಯ ಬಂಬು ಕುಣಿಯುವ ರಂಭೆಯಾಗಿದೆ. ಇದು ರಸಿಕನ ಮನೋಧರ್ಮ.

ಈ ರೀತಿಯಾಗಿ ದೂರಕ್ಕೆ ಹರಿದ ಇವನ ದೃಷ್ಟಿಯು ಅಲ್ಲಲ್ಲಿ ಹರಿದಾಡುತ್ತ ಮತ್ತೆ ತನ್ನ ಸನಿಹದ ಹುಣಿಸೆ ಮರದ ಸನಿಹಕ್ಕೇ ಬರುವದು. ಅಲ್ಲಿ ಮರದ ಮೇಲುಭಾಗದಲ್ಲಿ ಇವನಿಗೆ ಪಾರಿವಾಳದ ಜೋಡಿಯೊಂದು ಕಾಣುವದು. ಬಿಸಿಲು, ಮಳೆ, ಚಳಿ ಇವೆಲ್ಲ ಮನುಷ್ಯಮಾತ್ರರಿಗೆ ಸಹನೀಯವಾಗದಿರಬಹುದು. ಆದರೆ ನಿಸರ್ಗದ ಶಿಶುಗಳಾದ ಪಕ್ಷಿ, ಪ್ರಾಣಿಗಳಿಗೆ ಈ ವೈಪರೀತ್ಯದ ಪರಿವೆಯೇ ಇಲ್ಲ.

ಮ್ಯಾಲೆ ಅಲ್ಲಿ ಪಾರಿವಾಳ ಜೋಡಿ
ಒಂದಕ್ಕೊಂದ ನೋಡಿ
ಬಿಸಿಲ ತೆರೆ ದೂಡಿ
ಹಾರ್ತsದ ನೀಲಿಮುಗಿಲ್ಕೂಡಿ  ||ಹೂತsದ

ಪಾರಿವಾಳದ ಜೋಡಿಯು ಪ್ರೇಮದ ಸಂಕೇತವೇ ಆಗಿದೆ. ಇವುಗಳ ಕೆಳೆತನವನ್ನು ನೋಡಿರಿ. ಅವು ಕ್ಷಣ ಬಿಟ್ಟು ಕ್ಷಣ, ಗೋಣು ಹೊರಳಿಸುತ್ತ ಒಂದನ್ನೊಂದು ನೋಡುತ್ತಲೇ ಇರುತ್ತವೆ. ಈ ಬಿಸಿಲಿನ ಬಾಧೆ ತಮಗೆ ಏನೂ ಅಲ್ಲ ಎಂಬಂತೆ, ಬಿಸಿಲಿನ ತೆರೆಯನ್ನು ದೂಡಿ ಹಾರುತ್ತವೆ. ಎಲ್ಲಿಗೆ?... ಬೇಸಿಗೆಯ ನಿರಭ್ರ, ನೀಲಿ ಆಕಾಶಕ್ಕೆ!

ಅವು ಎಷ್ಟು ಸಮರೂಪವಾಗಿ ಹಾರುತ್ತಿವೆ ಎಂದರೆ, ಅವುಗಳ ಹಾರಾಟವನ್ನು ಪ್ರತ್ಯೇಕಿಸದೆ, ‘ಹಾರುತ್ತಿದೆ ಜೋಡಿ…..ಕೂಡಿ’ ಎಂದು ಬಣ್ಣಿಸಲಾಗಿದೆ ! ಹಾರುತ್ತಿರುವ ಈ ಜೋಡಿಯನ್ನು ಕಂಡಾಗ, ನಮ್ಮ ನಾಯಕನೂ ಸಹ ಮುಗಿಲನ್ನು ನಿಟ್ಟಿಸುತ್ತಾನೆ. ನೀಲಿ ಬಣ್ಣದ ಆಕಾಶದ ಆ ಡುಬರಿಯು ಆತನಿಗೆ ನೀರಿನ ಕೊಳದಂತೆ ಕಾಣುವದು.

ಕಂಡಂಗಾತು ನೀರಿನ ಕೊಳ
ನೀಲಿ ಮುಗಿಲ ಜಳಾ
ಎಂಥ ಝಳ ಝಳಾ
ಮುಳುಮುಳುಗಿ ಹೋತು ಮನದ ಧೂಳಾ ||ಹೂತsದ

ಡುಬರಿಬಿದ್ದ ನೀಲಿ ಆಕಾಶವು ಇವನಿಗೆ ‘ಜಳಾ’ ಅಂದರೆ ‘ಜಲ’ದಿಂದ (=ನೀರಿನಿಂದ) ತುಂಬಿದ ಕೊಳದಂತೆ ಕಾಣುವದು. ಜಳ ಪದಕ್ಕೆ ಸ್ವಚ್ಛ ಎನ್ನುವ ಅರ್ಥವೂ ಇದೆ. ಈ ನೀಲಾಕಾಶವೂ ಸಹ ಸ್ವಚ್ಛವಾದ ನೀರಿನ ಕೊಳದಂತೆ, ‘ಜಳಜಳ’ (=ಸ್ವಚ್ಛ)ವಾಗಿ ಆತನಿಗೆ ತೋರುವದು.
( ‘ಜಳ’ ಅಂದರೆ ಸ್ವಚ್ಛ ; ‘ಜಲ’ ಅಂದರೆ ನೀರು. ಈ ಪದಕ್ಕೆ ಇರುವ ಎರಡೂ ಅರ್ಥಗಳನ್ನು ಬೇಂದ್ರೆಯವರು ಇಲ್ಲಿ ಬಳಸಿಕೊಂಡಿದ್ದಾರೆ.) ಸ್ವಚ್ಛವಾದ ಮುಗಿಲು ಹಾಗು ಅದು ಸೂಸುವ ತಾಪ ಎರಡೂ ಅವನ ಅನುಭವಕ್ಕೆ ಬಂದಾಗ, ಆತ ‘ಎಂಥ ಝಳ ಝಳಾ’ ಎಂದು ಉದ್ಗರಿಸುತ್ತಾನೆ! (ಝಳ ಎಂದರೆ ತಾಪ, ಸೆಕೆ ; ಝಳಝಳ ಎಂದರೆ ಸ್ವಚ್ಛ !)

‘ಶುದ್ಧವಾದ ವಸ್ತುವನ್ನು ನೋಡಿದಾಗ ನಾವೂ ಶುದ್ಧವಾಗುತ್ತೇವೆ’ ಎಂದು ಶಾಸ್ತ್ರ ಹೇಳುತ್ತದೆ. ಹಳ್ಳಿಯ ಈ ಸಾಮಾನ್ಯ ವ್ಯಕ್ತಿಗೆ ಶಾಸ್ತ್ರ ಗೊತ್ತಿಲ್ಲ. ಆದರೆ ಝಳಝಳ ಆಕಾಶದಲ್ಲಿ ಅವನ ನೋಟ ನೆಟ್ಟಾಗ, ಅವನ ಮನಸ್ಸಿನಲ್ಲಿರಬಹುದಾದ ಧೂಳೆಲ್ಲ ಹೊರಟು ಹೋಗಿ ಅವನು ನಿರ್ಮಲ ಚಿತ್ತನಾಗುತ್ತಾನೆ.  ಈ ರೀತಿಯಾಗಿ ಸಮಯ ಸಾಗುತ್ತಿರಲು, ಮನಸ್ಸಿನ ಎಲ್ಲ ಉಪಾಧಿಗಳು ಮಾಯವಾಗಿ ಋಷಿಗಳು ಹೇಳುವ ‘ಶೂನ್ಯಮನೋಸ್ಥಿತಿ’ಯನ್ನು ಈತ ಮುಟ್ಟುತ್ತಾನೆ.

ಕಾಲ ಹೋಗತಿತ್ತ ಹಿಂದ ಸರಿದು
ಮನಸು ಆತ ಬರಿದು
ಮಧ್ಯಾನ ಬ್ಯಾಸರ ಮುರಿದು
ಬಿಸಿಲ ತಾನs ಹೋಗತಿತ್ತ ಹರಿದು ||ಹೂತsದ

ಬಿಸಿಲುಕಾಲದ ಮಧ್ಯಾಹ್ನದಲ್ಲಿ ಏನೂ ಕೆಲಸವಿಲ್ಲದೆ, ರಣರಣ ಹೊಡೆಯುವ ಬಿಸಿಲಿನಿಂದ ಬೇಸರಗೊಂಡ ಈತನ ಮನಸ್ಸು ಹೂತ ಹುಣಸಿಯ ಮರವನ್ನು ಕಂಡ ಬಳಿಕ, ಚಿತ್ತವಿಲಾಸದಲ್ಲಿ ತೊಡಗಿ, ಕೊನೆಗೆ ಅಲೆಗಳಿಲ್ಲದ ಸರೋವರದಂತಹ ನಿರ್ಭಾವವನ್ನು ಮುಟ್ಟುತ್ತದೆ. (ನಿರ್ವಾಣ ಸ್ಥಿತಿ ಎನ್ನೋಣವೆ?) ಇದೇ ರೀತಿ ಕಾಲ ಸರಿದು ಹೋಗುತ್ತಿದೆ, ಬಿಸಿಲು ಹರಿದು ಹೋಗುತ್ತಿದೆ. ಮನಸ್ಸು ನಿರಾಳಸುಖವನ್ನು ಅನುಭವಿಸುತ್ತಿದೆ.

ಪ್ರಕೃತಿಯಲ್ಲಿ ಭಾವಸಮಾಧಿ ಹೊಂದುವ ಇಂತಹ ಮನೋಸ್ಥಿತಿಯು ಸಮಾಧಾನ ಚಿತ್ತವುಳ್ಳ ವ್ಯಕ್ತಿಗೆ ಮಾತ್ರ ಸಾಧ್ಯ! ಇವನೇ ನಿಜವಾದ ಕವಿಹೃದಯ ಉಳ್ಳವನು. ಈತ ಪಂಡಿತನಿರಬೇಕಿಲ್ಲ, ನಾಗರಿಕನಿರಬೇಕಿಲ್ಲ. (ಇರದಿರುವದೇ ಉತ್ತಮ!?) ಅದಕ್ಕೆಂದೇ ಈ ಕವನದ ಕೊನೆಯ ಭರತವಾಕ್ಯವನ್ನು ವರಕವಿ ಬೇಂದ್ರೆಯವರು ರೀತಿ ಹೇಳುತ್ತಾರೆ :

ಕವಿ ಜೀವದ ಬ್ಯಾಸರ ಹರಿಸಾಕ
ಹಾಡ ನುಡಿಸಾಕ
ಹೆಚ್ಚಿಗೇನು ಬೇಕ?
ಒಂದು ಹೂತ ಹುಣಸಿಮರ ಸಾಕ ||ಹೂತsದ

ಕವಿಜೀವದ ಬೇಸರವು ಹರಿದ ಬಳಿಕ, ಕವಿಯ ಸುಖವು ಹಾಡಿನ ರೂಪದಲ್ಲಿಯೇ ಹೊರಹೊಮ್ಮಬೇಕಲ್ಲವೆ? ಆಗ ಆತನು ಹಾಡಿದ ಹಾಡು ಕವಿಗೆ ಸುಖ ನೀಡುವಂತೆಯೆ ಕೇಳುಗರಿಗೂ ಸುಖ ನೀಡುವದು. ಕವಿಗೆ ಹಾಗು ರಸಿಕರಿಗೆ ಸುಖ ನೀಡಲು ಹೂವು ಬಿಟ್ಟ ಹುಣಸಿ ಮರವೇ ಸಾಕು!
-------------------------------------------------------------

ಕವನದ ವೈಶಿಷ್ಟ್ಯಗಳು:
ಕವನಕ್ಕೆ ಸಮರ್ಪಕವಾದ ಛಂದಸ್ಸನ್ನು ಬಳಸುವದರಲ್ಲಿ ಬೇಂದ್ರೆಯವರನ್ನು ಸರಿಗಟ್ಟಬಲ್ಲವರಿಲ್ಲ. ‘ಪಾತರಗಿತ್ತಿ ಪಕ್ಕಾ’ ಕವನದಲ್ಲಿ ಅವರು brief and fluttering ಛಂದಸ್ಸನ್ನು ಬಳಸಿ, ಪಾತರಗಿತ್ತಿಯ ಹಿಂದೆಯೇ ಹಾರುತ್ತಾರೆ. ‘ಹೂತದ ಹುಣಸಿ’ ಕವನದ ಛಂದಸ್ಸನ್ನು ನೋಡಿರಿ. ಹಳ್ಳಿಯ ಸಾಮಾನ್ಯ ವ್ಯಕ್ತಿಯೊಬ್ಬನು ತನ್ನಷ್ಟಕ್ಕೆ ರಾಗವಾಗಿ ಮಾತನಾಡಿಕೊಳ್ಳುತ್ತಿರುವ ಛಂದಸ್ಸು ಈ ಕವನಕ್ಕಿದೆ. ಇಲ್ಲಿ ಬಳಸಲಾದ ಎಲ್ಲ ಪದಗಳೂ ಹಳ್ಳಿಗರು ಬಳಸುವ ದೇಸಿ ಪದಗಳೇ ಆಗಿವೆ. ಅಂತಹ ಪದಗಳಲ್ಲಿಯೇ ವಿವಿಧಾರ್ಥಗಳನ್ನು (pun) ಹೊರಡಿಸಬಲ್ಲ ಸಾಮರ್ಥ್ಯವನ್ನು  ಬೇಂದ್ರೆ ತೋರಿಸಿದ್ದಾರೆ.

ಬೇಂದ್ರೆಯವರ ಚಿತ್ರಕ ಶಕ್ತಿಯೂ ಅದ್ಭುತವಾದದ್ದು. ಕವನವನ್ನು ಓದುತ್ತಿದ್ದಂತೆಯೇ ಹೂವು ಬಿಟ್ಟ ಹುಣಸಿ ಮರವು ಕಣ್ಣಿಗೆ ಕಟ್ಟುತ್ತದೆ. ಅಷ್ಟೇ ಏಕೆ, ಬಿಸಿಲು ಹಾಗು ಗಾಳಿಯಂತಹ ನಿರ್ಜೀವ ವಸ್ತುಗಳಿಗೆ ಬೇಂದ್ರೆ ಇಲ್ಲಿ ಜೀವ ಕೊಟ್ಟಿದ್ದಾರೆ. ಡೇರೆಯನ್ನು ಹೊಡೆದುಕೊಂಡು ಪಹರೆ ಮಾಡುವ ಕಾವಲುಗಾರನ ರೂಪವನ್ನು ಬಿಸಿಲು ತಾಳುತ್ತದೆ. ದಿಕ್ಕು ನೋಡದೆ ಹರಿಯುವ ಗಾಳಿಯು ಸಿಳ್ಳು ಹಾಕುವ ನಿಶ್ಚಿಂತ ತರುಣನ ವ್ಯಕ್ತಿತ್ವವನ್ನು ಪಡೆಯುತ್ತದೆ.  ಸುಂಟರಗಾಳಿಯ ಬಂಬನ್ನು ಅವರು ಬಣ್ಣಿಸುವಾಗ, ಆ ಬಂಬು ಕಣ್ಣೆದುರಿಗೇ ನಿಲ್ಲುತ್ತದೆ. ನಾಯಕನ ಕೆಳದಿಯು ಒನಪು-ವೈಯಾರದ, ಹಳ್ಳಿಯ ಬೆಡಗಿಯಾಗಿ ನಮ್ಮ ಮನದಲ್ಲಿ ನಿಲ್ಲುತ್ತಾಳೆ.

‘ಉಪಮಾ ಕಾಲಿದಾಸಸ್ಯ’ ಎಂದು ಹೇಳುತ್ತಾರೆ. ಉಪಮೆಗಳನ್ನು ಕೊಡುವದರಲ್ಲಿ ಬೇಂದ್ರೆಯವರು ಕಾಲಿದಾಸನಿಗೆ ಸರಿಸಾಟಿ ಎನ್ನಬಹುದು. ಹುಣಸಿಯ ಚಿಗುರುಗಳನ್ನು ಮದರಂಗಿ ಹಚ್ಚಿದ ಉಗುರುಗಳಿಗೆ ಹೋಲಿಸುವದರಲ್ಲಿ , ಹುಣಸಿಯ ರೆಂಬೆಯನ್ನು ಕಾಮನಬಿಲ್ಲಿನ ತುದಿಗಳಿಗೆ ಹೋಲಿಸುವದರಲ್ಲಿ ಅಥವಾ ಸುಂಟರಗಾಳಿಯ ಕುಣಿತವನ್ನು ಡೊಂಬರ ರಂಭೆಯ ಕುಣಿತಕ್ಕೆ ಹೋಲಿಸುವದರಲ್ಲಿ ಇವರ ವಾಸ್ತವಪ್ರಜ್ಞೆ ಹಾಗು ಉಪಮಾ ಪ್ರತಿಭೆ ವ್ಯಕ್ತವಾಗುತ್ತವೆ. ಆದರೆ ನಮ್ಮ ನಾಯಕನ ರಸಿಕ ವ್ಯಕ್ತಿತ್ವವನ್ನು ಬಯಲುಗೊಳಿಸುವದೇ ಈ ಉಪಮೆಗಳ ನೈಜ ಉದ್ದೇಶವಾಗಿದೆ.

ಇಲ್ಲಿ ಮತ್ತೊಂದು ಸಾಮ್ಯವನ್ನು ಗಮನಿಸಬೇಕು. ಚಿಗುರು ಬಿಟ್ಟ ಹುಣಸಿಯ ಮರವು ಫಲಿತವಾಗಲು ದುಂಬಿಗಾಗಿ ಕಾಯುತ್ತದೆ. ಅದರಂತೆಯೇ, ಉಗುರಿಗೆ ಮದರಂಗಿಯನ್ನು ಹಚ್ಚಿಕೊಂಡ ಹುಡುಗಿಯು ತನ್ನ ನಲ್ಲನಿಗಾಗಿ ಕಾತರಿಸುತ್ತಾಳೆ. ಈ ಎರಡೂ ಕ್ರಿಯೆಗಳು ಸೃಷ್ಟಿಗಾಗಿ ಇವೆ. ಆದುದರಿಂದಲೇ, ನಮ್ಮ ನಾಯಕನು ತನ್ನ ಕೆಳದಿಯ  ಹಗಲುಗನಸು ಕಾಣುವ ವರ್ಣನೆ ಮುಂದಿನ ನುಡಿಗಳಲ್ಲಿ ಬರುತ್ತದೆ.

ಉಮರ ಖಯ್ಯಾಮನ ‘ರುಬಾಯತ್’ ಕಾವ್ಯವು ಜೀವನಪ್ರೀತಿಯ ತತ್ವಕ್ಕಾಗಿ ತುಂಬ ಪ್ರಸಿದ್ಧವಾಗಿದೆ. ಆ ಕಾವ್ಯದಲ್ಲಿ ಬರುವ  ‘Come, fill the cup ಎನ್ನುವ ಸಾಲಂತೂ ಎಲ್ಲೆಲ್ಲೂ ಉದ್ಧೃತವಾಗಿದೆ:
ನಮ್ಮ ಹಳ್ಳಿಯ ಗೃಹಸ್ಥನಿಗೆ ಇದಕ್ಕಿಂತ ಹೆಚ್ಚಿನ ತತ್ವಜ್ಞಾನವು ತನ್ನ ಗ್ರಾಮೀಣ ಸಂಸ್ಕೃತಿಯ ಮೂಲಕವೇ ಅರಿವಾಗಿದೆ. ಅದಕ್ಕೆಂದೇ ಆತ ತನ್ನ ಕೆಳದಿಯನ್ನು ಒಲವಿನಿಂದ ನೋಡಬಯಸುವದು ಹೀಗೆ:

ಹಾರತಿರಲಿ ಗಾಳಿಗೆ ಬಿಚ್ಚಿದ್ಹೆರಳು
ವಾರಿಯಿರಲಿ ಕೊರಳು
ಬಾಚತಿರಲಿ ಬೆರಳು
ನೋಡ್ತೇನಿ ನಿನ್ನ ಕವಿನೆರಳು ||ಹೂತsದ

ರಚನೆಯ ವೈಶಿಷ್ಟ್ಯ:
ಹೂವು ಬಿಟ್ಟ ಹುಣಸಿಯ ಮರವು ಎಂತಹ ಮನೋವಿಲಾಸಕ್ಕೆ, ಎಂತಹ ನೆಮ್ಮದಿಗೆ ಕಾರಣವಾಗಬಹುದು ಎನ್ನುವದನ್ನು ಬೇಂದ್ರೆಯವರು ನುಡಿಗೆ ನುಡಿ ಜೋಡಿಸುತ್ತ ಅತ್ಯಂತ ಕ್ರಮಬದ್ಧವಾಗಿ ತೋರಿಸುತ್ತ ಹೋಗಿದ್ದಾರೆ. ನಿರುದ್ದಿಶ್ಯವಾಗಿ ಚಲಿಸುತ್ತಿರುವ ಮನಸ್ಸಿನ ವಿಲಾಸವನ್ನು ಚಿತ್ರಿಸುವ ಕಲ್ಪನಾಸಾಮರ್ಥ್ಯವು ಬೇಂದ್ರೆಯವರ ಕಾವ್ಯಪ್ರತಿಭೆಯ ಫಲವಾದರೆ, ಉದ್ದೇಶಪೂರ್ಣ ಕ್ರಮಬದ್ಧತೆಯು ಅವರ ಕಾವ್ಯರಚನಾಪ್ರತಿಭೆಯ ಫಲವಾಗಿದೆ. ಪ್ರತಿಭೆ ಹಾಗು ಪಾಂಡಿತ್ಯ ಇವೆರಡೂ ಬೇಂದ್ರೆಯವರಲ್ಲಿ ಸಮರಸವಾಗಿ ಮೇಳವಿಸಿರುವದರಿಂದಲೇ ‘ಹೂತದ ಹುಣಸಿ’ಯಂತಹ ಶ್ರೇಷ್ಠ ಕವನವು ಅವರ ಮನದಲ್ಲಿ ಮೂಡಲು ಸಾಧ್ಯವಾಗಿದೆ ಎನ್ನಬಹುದು.

‘ಒಂದು ಹೂತ ಹುಣಸಿಮರವನ್ನು ಕಂಡರೂ ಸಾಕು, ಪ್ರಕೃತಿಯಲ್ಲಿ ಭಾವಸಮಾಧಿ ಹೊಂದಬಲ್ಲ  ಸಾಮರ್ಥ್ಯ ಕವಿಜೀವಕ್ಕೆ ಇದೆ’, ಎಂದು ಬೇಂದ್ರೆ ಕೊನೆಯ ನುಡಿಯಲ್ಲಿ ಹೇಳುತ್ತಾರೆ. ಇಂತಹ ಕಾವ್ಯರಚನೆಯನ್ನು ಮಾಡುವ ಸಾಮರ್ಥ್ಯವು ಕಾವ್ಯದಲ್ಲಿ ಸಮಾಧಿಸ್ಥನಾಗಬಲ್ಲ ವರಕವಿಗೆ ಮಾತ್ರ ಸಾಧ್ಯ, ಅಲ್ಲವೆ!
------------------------------------------------------------
[ಟಿಪ್ಪಣಿ:
‘ಹೂತsದ ಹುಣಸಿ’ ಕವನದಲ್ಲಿ ಬೇಂದ್ರೆಯವರು ‘ಪ್ರಕೃತಿಸಮಾಧಿ’ಯನ್ನು ಬಣ್ಣಿಸಿದ್ದಾರೆ. ನಗರದ ವಾತಾವರಣದಿಂದಾಗಿ ಇಂತಹ ಪ್ರಕೃತಿಸಾಮರಸ್ಯಸುಖವು ಪಾಶ್ಚಾತ್ಯರಿಗೆ ಅಲಭ್ಯವಾಗಿದೆ. ಇದನ್ನು ಕೆಲವು ಹಳೆಯ ಪಾಶ್ಚಾತ್ಯ ಕವಿಗಳು ತಮ್ಮ ಕವನಗಳಲ್ಲಿ ಅಭಿವ್ಯಕ್ತಿಸಿದ್ದಾರೆ.

ಉದಾಹರಣೆಗೆಂದು W.H.Davies ಇವರು ಬರೆದ ಕವನವೊಂದರ ಮೊದಲ ನುಡಿಯನ್ನು ಗಮನಿಸಬಹುದು :

What is this life if full of care,
There is no time to stand and stare?
No time to stand beneath the boughs
And stare as long as sheep and cows.

ಎರಡನೆಯ ಉದಾಹರಣೆ ಎಂದರೆ ಪ್ರಸಿದ್ಧ ಇಂಗ್ಲಿಶ್ ಕವಿ ಯೇಟ್ಸನ ಸುಪ್ರಸಿದ್ಧ ಕವನ:
‘The Lake isle of Innisfree’.

I will arise and go now, and go to Innisfree,
And a small cabin build there, of clay and wattles made:
Nine bean-rows will I have there, a hive for the honey-bee,
And live alone in the bee-loud glade.

And I shall have some peace there, for peace comes dropping slow,
Dropping from the veils of the morning to where the cricket sings;
There midnight's all a glimmer, and noon a purple glow,
And evening full of the linnet's wings.

I will arise and go now, for always night and day
I hear lake water lapping with low sounds by the shore;
While I stand on the roadway, or on the pavements grey,
I hear it in the deep heart's core.

ಈ ಇಬ್ಬರೂ ಇಂಗ್ಲಿಶ್ ಕವಿಗಳು ಆಧುನಿಕ ನಾಗರಿಕತೆಯು ಕಳೆದುಕೊಂಡ ಪ್ರಕೃತಿಯ ಕೆಳೆತನಕ್ಕಾಗಿ ಹಲಬುವ ಕವನಗಳನ್ನು ಬರೆದಿದ್ದಾರೆ. ಬೇಂದ್ರೆಯವರು ಆ ಕೆಳೆತನವು ಹೇಗೆ ಇರುವದು ಎನ್ನುವದನ್ನು ತೋರಿಸಿದ್ದಾರೆ.]

------------------------------------------------------------

ಒಂದು ಘಟನೆ:
ಈ ಘಟನೆಯನ್ನು ನನಗೆ ಶ್ರೀ ವ್ಯಾಸ ದೇಶಪಾಂಡೆ ಹೇಳಿದರು :
ಗದಗಿನಲ್ಲಿ (?) ನಡೆಯುತ್ತಿದ್ದ ಒಂದು ಸಾಹಿತ್ಯಸಮಾರಂಭದ ವೇದಿಕೆಯ ಮೇಲೆ ಶ್ರೀ ಬೇಂದ್ರೆ, ಶ್ರೀ ಆರ್.ಸಿ. ಹಿರೇಮಠ ಹಾಗು ಶ್ರೀ ಧಾರವಾಡಕರ ಉಪಸ್ಥಿತರಿದ್ದರು. ಶ್ರೀ ಆರ್.ಸಿ.ಹಿರೇಮಠರು ಬೇಂದ್ರೆಯವರಿಗೆ ಚೇಷ್ಟೆ ಮಾಡುವ ಉದ್ದೇಶದಿಂದ, “ಬೇಂದ್ರೆ ಅವರು ಬೇಕಾದ್ದರ ಮ್ಯಾಲೆ ಕವನಾ ಬರೀತಾರ; ಇಕಾ ನೋಡರಿ, ಆ ಎದುರಿಗಿರೋ ಹುಣಸಿ ಮರದ ಮ್ಯಾಲೂ ಒಂದ ಕವನಾ ಕಟ್ಟತಾರ ಅವರು” ಎಂದು ಅಂದರಂತೆ. ತಕ್ಷಣವೇ ಬೇಂದ್ರೆಯವರು ಎದ್ದು ನಿಂತು, ಕೈ ಮೇಲೆತ್ತಿ, ಹಸ್ತಚಲನೆ ಮಾಡುತ್ತ ಉದ್ಗರಿಸಿದರಂತೆ :
“ಕವಿಗೇನು ಬೇಕs
ಹೂತ ಹುಣಸಿ ಮರ ಸಾಕs”
---------------------------------------------------------
ಸರ್ವರಿಗೂ ೨೦೧೧ನೆಯ ವರುಷದ ಶುಭಾಶಯಗಳು.
------------------------------------------------